ಚಾಮುಂಡೇಶ್ವರಿ, ನಂಜುಂಡೇಶ್ವರನ ದರ್ಶನ ಪಡೆದ ಸಚಿವ ST ಸೋಮಶೇಖರ್
ಮೈಸೂರು, ಜೂನ್ 8: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಲಾಕ್ ಡೌನ್ ಘೋಷಿಸಲಾದ ಹಿನ್ನೆಲೆಯಲ್ಲಿ ಪ್ರವೇಶ ನಿಷೇಧಕ್ಕೊಳಪಟ್ಟಿದ್ದ ದೇವಸ್ಥಾನಗಳು ಇದೀಗ ಸಾರ್ವಜನಿಕ ದರ್ಶನಕ್ಕೆ ಮುಕ್ತವಾಗಿದೆ.
Recommended Video
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ನಾಡಿನ ಸಮಸ್ತ ಜನತೆಯನ್ನು ಕೊರೊನಾ ವೈರಸ್ ಎಂಬ ಮಹಾಮಾರಿಯಿಂದ ದೂರ ಮಾಡುವಂತೆ ತಾಯಿ ಚಾಮುಂಡೇಶ್ವರಿ ಹಾಗೂ ಶ್ರೀ ನಂಜುಂಡೇಶ್ವರನಲ್ಲಿ ಪ್ರಾರ್ಥಿಸುವ ಮೂಲಕ ಸರ್ವರಿಗೂ ಒಳಿತನ್ನು ಮಾಡುವಂತೆ ಎಸ್.ಟಿ.ಸೋಮಶೇಖರ್ ಕೇಳಿಕೊಂಡರು.
ಜೂನ್ 8 ರಿಂದ ಚಾಮುಂಡಿ ಬೆಟ್ಟ ರೀ ಓಪನ್: ಗಮನಿಸಬೇಕಾದ ಅಂಶಗಳು
ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ನಾಗೇಂದ್ರ, ಹರ್ಷವರ್ಧನ್, ಜಿಲ್ಲಾಧಿಕಾರಿ ಅಭಿರಾಂ.ಜಿ.ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಇತರ ಪ್ರಮುಖರು ಹಾಜರಿದ್ದರು.
ಮೈಸೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣ
ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿದೆ. ಆದರೂ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಹೊರ ರಾಜ್ಯಗಳಿಂದ ಬರುವವರ ಬಗ್ಗೆ ಜಿಲ್ಲಾಡಳಿತ ನಿಗಾ ವಹಿಸಿದೆ. ಪೊಲೀಸರು ಮಫ್ತಿಯಲ್ಲಿದ್ದು ಗಮನಿಸುತ್ತಿದ್ದಾರೆ. ಒಂದು ವೇಳೆ ಪ್ರವೇಶ ಕಂಡುಬಂದರೆ ಅವರನ್ನು ವಾಪಸ್ ಕಳುಹಿಸಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಆಷಾಡ ಪ್ರವೇಶ ಬಗ್ಗೆ ಚರ್ಚಿಸಿ ನಿರ್ಧಾರ
ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯಲು ಜನ ಕಾಯುತ್ತಿದ್ದಾರೆ. ಆಷಾಡ ಮಾಸದ ಸಂದರ್ಭದಲ್ಲಿ ಏನು ಮಾಡಬಹುದು? ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬಹುದು? ಎಂಬ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಉನ್ನತಾಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮೈಸೂರು: ಉಳ್ಳವರಿಗೆ ನಂಜುಂಡೇಶ್ವರನ ದರ್ಶನ, ಇಲ್ಲದವರಿಗೆ ಭ್ರಮನಿರಸನ
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟ
ಆಷಾಡ ಮಾಸ ಆಚರಣೆಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಒಮ್ಮೆಲೆಗೆ 50 ಸಾವಿರದಿಂದ 1 ಲಕ್ಷ ಮಂದಿ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವ ರೀತಿಯಾಗಿ ಪ್ರವೇಶಕ್ಕೆ ಅನುಮತಿ ಕೊಡಬೇಕು ಎಂಬ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಸುದ್ದಿಗಾರರಿಗೆ ತಿಳಿಸಿದರು.
ಕರ್ನಾಟಕದಲ್ಲಿ ಕೊರೊನಾ ವೈರಸ್
ಕರ್ನಾಟಕದಲ್ಲಿ ಈವರೆಗೂ 5452 ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈವರೆಗೂ 2132 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದರೆ, 61 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 3257ಗೆ ಏರಿಕೆಯಾಗಿದೆ.