ಮೈಸೂರಿನ KR ಆಸ್ಪತ್ರೆಗೆ ಸಚಿವ ಸೋಮಶೇಖರ್ ದಿಢೀರ್ ಭೇಟಿ
ಮೈಸೂರು, ಏಪ್ರಿಲ್ 20: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸೋಮಶೇಖರ್, ವಾರ್ಡ್ಗಳ ಲಭ್ಯತೆ, ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಔಷಧಗಳ ಲಭ್ಯತೆ, ಊಟ-ಉಪಹಾರ ಸರಬರಾಜು ಸೇರಿದಂತೆ ಕುಂದು-ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ವೈದ್ಯಾಧಿಕಾರಿಗಳು ಹಾಗೂ ಸೋಂಕಿತರಿಂದ ಮಾಹಿತಿ ಪಡೆದ ಸಚಿವರು, ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು. ಔಷಧಗಳು ಸೇರಿದಂತೆ ಯಾವುದೇ ನ್ಯೂನತೆಗಳು, ಸಮಸ್ಯೆಗಳಿದ್ದರೂ ತಮಗೆ ತಿಳಿಸಿದರೆ ಸರ್ಕಾರದ ಗಮನಕ್ಕೆ ತಂದು ತಕ್ಷಣ ಬಗೆಹರಿಸಿಕೊಡುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ಮೈಸೂರು ಹಾಗೂ ಸುತ್ತಮುತ್ತಲಿನ ಭಾಗದ ಜನತೆಗೆ ಸಮಸ್ಯೆಯಾಗಬಾರು. ಆ ನಿಟ್ಟಿನಲ್ಲಿ ನಾನೂ ಸೇರಿದಂತೆ ಇಲ್ಲಿನ ಜಿಲ್ಲಾಡಳಿತ, ಜನಪ್ರತಿನಿಧಿಗಳು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ ಸೇರಿದಂತೆ ಇನ್ನಿತರ ಮುಖಂಡರು ಇದೇ ವೇಳೆ ಉಪಸ್ಥಿತರಿದ್ದರು.
ಎಚ್ಚರದಿಂದಿರಲು ಜನತೆಗೆ ಮನವಿ
ಈಗ ಕಾಡುತ್ತಿರುವ ಕೋವಿಡ್ ಎರಡನೇ ಅಲೆ ಬಹಳ ಗಂಭೀರವಾಗಿದೆ. ಹೀಗಾಗಿ ಸಾರ್ವಜನಿಕರು ಸಹ ಇದನ್ನು ಅಷ್ಟೇ ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೇರಿತವಾಗಿ ಸರ್ಕಾರದ ಜೊತೆಗೆ ಕೈಜೋಡಿಸಿ ನಮ್ಮ ನಾಡನ್ನು ಕೊರೊನಾ ಮುಕ್ತ ಮಾಡುವಲ್ಲಿ ಶ್ರಮವಹಿಸಬೇಕು. ಯಾರಿಗಾದರೂ ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಸೋಂಕು ಉಲ್ಬಣವಾಗದಂತೆ ನೋಡಿಕೊಳ್ಳಬೇಕು ಎಂದರು.

ಜೊತೆಗೆ ಅನಾವಶ್ಯಕವಾಗಿ ಹೊರಗಡೆ ಯಾರೂ ಸಂಚರಿಸಬಾರದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಿ, ಆಗಾಗ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅವರು ಜನತೆಯಲ್ಲಿ ಮನವಿ ಮಾಡಿದರು.












Click it and Unblock the Notifications