ಲಾಕ್ಡೌನ್ ಮುಂದುವರೆಯುವ ಬಗ್ಗೆ ಸುಳಿವು ನೀಡಿದ ಸಚಿವ ಎಸ್ಟಿಎಸ್
ಮೈಸೂರು, ಏಪ್ರಿಲ್ 28: ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ಲಾಕ್ಡೌನ್ ಮುಂದುವರೆಯುವ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್ ಸುಳಿವು ನೀಡಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅವರು, ಲಾಕ್ಡೌನ್ ಮುಂದುವರಿಕೆ ಅನಿವಾರ್ಯತೆ ಆಗಬಹುದು ಎಂದು ಹೇಳುವ ಮೂಲಕ ಮತ್ತೊಂದು ವಾರ ಲಾಕ್ಡೌನ್ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಸುಳಿವು ಕೊಟ್ಟರು.
ತಜ್ಞರ ಸಲಹೆ ಮೇರೆಗೆ ರಾಜ್ಯ ಸರ್ಕಾರ ಹದಿನಾಲ್ಕು ದಿನ ಲಾಕ್ಡೌನ್ ಘೋಷಣೆ ಮಾಡಿದೆ. ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಜನರು ನಮಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜನರು ಸ್ಪಂದಿಸದೆ ಇದ್ದರೆ ಮುಂದೆಯೂ ಲಾಕ್ಡೌನ್ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಲಾಕ್ಡೌನ್ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ10 ರವರೆಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದರು.
ಅದಾದ ನಂತರ ಯಾರೇ ಬಂದರೂ ಕಠಿಣ ಕ್ರಮ ಜರುಗಿಸಿ, ಇಲ್ಲವಾದರೆ ಪೊಲೀಸರು ಇದಕ್ಕೆ ಹೊಣೆಗಾರರಾಗುತ್ತಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಸೂಚನೆ ನೀಡಿದರು.