ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ: ಸಚಿವ ಎಸ್.ಟಿ.ಎಸ್ ಸಂತಸ
ಮೈಸೂರು, ಸೆಪ್ಟೆಂಬರ್ 15: ಕನ್ನಡ ಚಿತ್ರರಂಗದ ಖ್ಯಾತ ನಟ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕೆಂಬ ಬಹು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆನ್ ಲೈನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
""ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳುವಿನಲ್ಲಿ 5.5 ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಚಿತ್ರ ಕಲಾವಿದರೊಬ್ಬರಿಗೆ ಈ ಮೂಲಕ ಸರ್ಕಾರ ಗೌರವ ಸಮರ್ಪಣೆ ಮಾಡಿದಂತಾಗಿದೆ.''
ಸೆ.15 ರಂದು ದಿ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸಿಎಂ ಚಾಲನೆ
""ವಿಷ್ಣವರ್ಧನ್ ಅವರ ಹುಟ್ಟೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಗಳ ಕೂಗಿಗೆ ಪ್ರತಿಫಲ ಸಿಕ್ಕಂತಾಗಿದೆ. ವಿಷ್ಣು ಅವರ ವಿದ್ಯಾಭ್ಯಾಸ ಸಹ ಮೈಸೂರಿನಲ್ಲಿಯೇ ಆಗಿದ್ದು, ಅವರಿಗೂ ಹಾಗೂ ಮೈಸೂರಿಗೂ ಅವಿನಾಭಾವ ನಂಟಿದೆ'' ಎಂದರು.
ಒಟ್ಟು 11 ಕೋಟಿ ರುಪಾಯಿ ಯೋಜನೆ ಇದಾಗಿದ್ದು, ಒಟ್ಟು 5.5 ಎಕರೆ ಜಾಗದಲ್ಲಿ 2 ಎಕರೆಯಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ತಲೆ ಎತ್ತಲಿದೆ. ಜೊತೆಗೆ 6 ಅಡಿ ಎತ್ತರದ ವಿಷ್ಣುವರ್ಧನ್ ಅವರ ಪುತ್ಥಳಿಯೂ ತಲೆ ಎತ್ತುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಸಚಿವ ಸೋಮಶೇಖರ್ ಹೇಳಿದರು.
ಪುಣೆಯ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾದ ಶಾಖೆ ಸಹ ಇಲ್ಲಿ ಆರಂಭವಾಗಲಿದ್ದು, ಇದರ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಅಲ್ಲದೆ, ಇಲ್ಲಿ ಮ್ಯೂಸಿಯಂ ಸಹ ನಿರ್ಮಾಣಗೊಳ್ಳುವುದರಿಂದ ವಿಷ್ಣು ಅವರ ನೆನಪುಗಳು ಚಿತ್ರ ರಸಿಕರ ಕಣ್ಮನ ಸೆಳೆಯಲಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಈ ವಿಚಾರವಾಗಿ ಡಾ.ವಿಷ್ಣುವರ್ಧನ್ ಅವರ ಶ್ರೀಮತಿ ಭಾರತಿ ವಿಷ್ಣುವರ್ಧನ್ ಹಾಗೂ ಕುಟುಂಬದವರಿಗೆ ಸರ್ಕಾರದಿಂದ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.
ವಿಷ್ಣು ಸ್ಮಾರಕಕ್ಕೆ ಅಡಿಗಲ್ಲು
ಬಹಳ ವರ್ಷಗಳ ವಿಳಂಬದ ನಂತರ ಮಂಗಳವಾರ ಕನ್ನಡ ಚಿತ್ರರಂಗದ ಹಿರಿಯ ನಟ ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಯಿತು. ನಗರದ ಹೊರವಲಯದ ಹಾಲಾಳು ಗ್ರಾಮದಲ್ಲಿ ನಡೆದ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆನ್ಲೈನ್ ಮೂಲಕವೇ ಚಾಲನೆ ನೀಡಿದರು.
ಸುಮಾರು 11 ಕೋಟಿ ರೂ. ವೆಚ್ಚದ ಸ್ಮಾರಕ ನಿರ್ಮಾಣ ಮಾಡಲು ಪೊಲೀಸ್ ವಸತಿ ನಿಗಮಕ್ಕೆ ಗುತ್ತಿಗೆ ನೀಡಲಾಗಿದೆ. ಈ ಸ್ಮಾರಕ ನಿರ್ಮಾಣದ ನೀಲಿ ನಕಾಶೆಯನ್ನು ಎಂ-9 ಡಿಸೈನ್ ಸ್ಟುಡಿಯೋದಿಂದ ಮಾಡಿಸಲಾಗಿದ್ದು, ಇದರಲ್ಲಿ ವಿಷ್ಣು ಅವರ ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪಾಂಡ್ ಒಳಗೊಂಡ ಡಾ.ವಿಷ್ಣು ಸ್ಮಾರಕ ನಿರ್ಮಾಣಗೊಳ್ಳಲಿದೆ.
ಈ ಸರಳ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೆಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಿ ವಿಷ್ಣುವರ್ಧನ್, ಶಾಸಕ ಎಸ್.ಎ.ರಾಮದಾಸ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಇತರರು ಹಾಜರಿದ್ದರು.