ಜೆಎಸ್ಎಸ್ ಆಸ್ಪತ್ರೆಯಲ್ಲಿ 500 ಹಾಸಿಗೆ ನೀಡಲು ಸುತ್ತೂರು ಶ್ರೀಗಳಲ್ಲಿ ಮನವಿ
ಮೈಸೂರು, ಏಪ್ರಿಲ್ 27: ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 500 ಹಾಸಿಗೆಯನ್ನು ಮೈಸೂರು ಜಿಲ್ಲಾಡಳಿತಕ್ಕೆ ನೀಡುವಂತೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಮಂಗಳವಾರ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗೆ ಮನವಿ ಮಾಡಿದರು.
ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಆಗಮಿಸಿ, ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಸಚಿವ ಎಸ್.ಟಿ ಸೋಮಶೇಖರ್, ಕೋವಿಡ್ ಚಿಕಿತ್ಸೆಗೆ ನಿಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಜೆಎಸ್ಎಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಹಾಸಿಗೆಗಳನ್ನು ನೀಡಲು ವಿನಂತಿಸಿದರು.
ಸರ್ಕಾರ ನಿಯೋಜಿಸುವ ಕೋವಿಡ್ ರೋಗಿಗಳ ಚಿಕಿತ್ಸೆಗೆ ಇನ್ನೂ 500 ಹಾಸಿಗೆಗಳನ್ನು, ಮುಖ್ಯವಾಗಿ ಆಕ್ಸಿಜನೇಟೆಡ್ ಹಾಸಿಗೆಗಳನ್ನು ಒದಗಿಸುವಂತೆ ಮಾಡಿದ ಮನವಿಗೆ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಲಾಗಿದೆ.
ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆ ನೀಗಲು ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎಂ.ಎಂ.ಸಿ & ಆರ್.ಐ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿರುವ ಎಂಬಿಬಿಎಸ್ ಹಾಗೂ ಫಾರ್ಮಸಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಬಳಸಿಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕರಾದ ಡಾ.ಯತಿಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ಹರ್ಷವರ್ಧನ್, ಮತ್ತಿತರರು ಉಪಸ್ಥಿತರಿದ್ದರು.