ಪಿರಿಯಾಪಟ್ಟಣ: ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ
ಮೈಸೂರು, ಜು,13: ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಉರುಳಿ ಬಿದ್ದಿರುವ ಮನೆಗಳಿಗೆ ತೆರಳಿದ ಸಚಿವರು, ಹಾನಿಗೀಡಾದ ಮನೆಗಳಿಗೆ ತಕ್ಷಣ ಪರಿಹಾರ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಪ್ರಮಾಣ, ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದುಕೊಂಡರು. ಮಳೆಯಿಂದ ಹಾನಿಗೊಳಗಾದ ಮನೆಯ ಮಾಲೀಕರು ಸಚಿವರ ಬಳಿ ತಮ್ಮ ಅಳಲು ತೋಡಿಕೊಂಡಿರು. ಅವರಿಗೆ ಸಾಂತ್ವನ ಹೇಳಿದ ಸಚಿವರು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಅಗತ್ಯ ನೆರವು ಒದಗಿಸುವುದಾಗಿ ತಿಳಿಸಿದರು.
ಕಬಿನಿಯಿಂದ ನೀರು ಬಿಡುಗಡೆ, ಮುಳುಗಡೆಯತ್ತಾ ನಂಜನಗೂಡು?
ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ : ಸೋಮಶೇಖರ್
ನಂತರ ಹೆಚ್.ಡಿ.ಕೋಟೆ ತಾಲೂಕಿಗೆ ತೆರಳಿದ ಸಚಿವರು, ಬೀಚನಹಳ್ಳಿಯ ಕಬಿನಿ ಅಣೆಕಟ್ಟೆಯ ಬಲದಂಡೆ ಪ್ರದೇಶದ ಕೆಳಭಾಗದಲ್ಲಿ ಮುಳುಗಡೆಯಾಗಿರುವ ಸೇತುವೆಯನ್ನು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಸ್ಥಳೀಯರು ವಸತಿ ಸೌಲಭ್ಯ ಕಲ್ಪಿಸುವಂತೆ ಸಚಿವರಿಗೆ ಮನವಿ ಪತ್ರ ನೀಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಎಲ್ಲವೂ ಅಂತಿಮ ಹಂತದಲ್ಲಿದ್ದು ನಿವೇಶನ ಮಂಜೂರು ಆಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿರುವುದರಿಂದ ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ ಎಂದರು.
ಹಾನಿ ಪ್ರಮಾಣದ ಮೇಲೆ ಪರಿಹಾರ
ಮಳೆಯಿಂದ ಮನೆ ಹಾನಿಯಾದರೆ ಜಿಲ್ಲಾಡಳಿತ ತ್ವರಿತವಾಗಿ ಪರಿಹಾರ ಕಲ್ಪಿಸಲಿದೆ. ಪೂರ್ತಿ ಮನೆ ಕಳೆದುಕೊಂಡವರಿಗೆ 5 ಲಕ್ಷ, ಕಡಿಮೆ ಹಾನಿಯಾಗಿದ್ದರೆ ಹಾನಿ ಪ್ರಮಾಣದ ಮೇಲೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ ಸೇರಿದಂತೆ ಹಲವು ಅಧಿಕಾರಿಗಳು ಜೊತೆಯಲ್ಲಿದ್ದರು. ಜುಲೈ 12ರ ಅಂಕಿಅಂಶದಂತೆ ಜಲಾಶಯದ ನೀರಿನ ಮಟ್ಟ 2282.51 ಅಡಿಗಳಷ್ಟಿದ್ದು 8.74 ಟಿಎಂಸಿ ನೀರಿನ ಸಂಗ್ರಹಣೆ ಇದೆ. 34 ಸಾವಿರ ಕ್ಯೂಸೆಕ್ಸ್ ಒಳ ಹರಿವು, 35,333 ಕ್ಯೂಸೆಕ್ಸ್ ಹೊರ ಹರಿವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ನಾಲೆಗಳಿಗೆ ನೀರು ಹರಿಸುವಂತೆ ಸಚಿವ ಸೂಚನೆ
ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
2022ರ ಮುಂಗಾರು ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಮೊದಲಿಗೆ ಕೆರೆ ಕಟ್ಟೆಗಳು ಭರ್ತಿಯಾಗಲು ನೀರು ಹರಿಸಲಾಗುವುದು. ಈಗಾಗಲೇ ಕೆರೆಗಳಲ್ಲಿ 30% ನೀರು ತುಂಬಿದೆ. ಹತ್ತು ದಿನ ಕೆರೆಗಳಿಗೆ ನೀರು ಹರಿಸಿ ನಂತರ ನಾಲೆಗಳಿಗೆ ನೀರು ಹರಿಸುವಂತೆ ಸಚಿವರು ಸೂಚಿಸಿದರು.
ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 120ಕ್ಕೂ ಹೆಚ್ಚು ಕೆರೆಗಳು
ಜುಲೈ 15 ರಿಂದ 24ರವರೆಗೆ ಕೆರೆಗಳಿಗೆ, ಜುಲೈ 25 ರಿಂದ ಆಗಸ್ಟ್ 14ರವರೆಗೆ ನಾಲೆಗಳಿಗೆ ನೀರು ಹರಿಸಲಾಗುವುದು. ಆಗಸ್ಟ್ 15ರಿಂದ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಕಬಿನಿ ಜಲಾಶಯದಲ್ಲಿ 1,08,060, ಹುಲ್ಲಹಳ್ಳಿ ಅಣೆಕಟ್ಟು ನಾಲೆ ಭಾಗದಲ್ಲಿ 14,309 ಎಕರೆ ಪ್ರದೇಶ ಸೇರಿದಂತೆ 1,22,369 ಎಕರೆ ಪ್ರದೇಶವಿದೆ. ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 120ಕ್ಕೂ ಹೆಚ್ಚು ಕೆರೆಗಳಿವೆ. ಕೊನೆಭಾಗದ ಕೆರೆಗಳು ಭರ್ತಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಸಭೆಯಲ್ಲಿ ಶಾಸಕರುಗಳಾದ ಅಶ್ವಿನ್ ಕುಮಾರ್, ಹರ್ಷವರ್ಧನ್, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯಿತಿ ಸಿಇಒ ಗಾಯತ್ರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
Recommended Video