ಮೈಸೂರು ಅರಮನೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ
ಮೈಸೂರು, ಏಪ್ರಿಲ್ 15: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಸ್.ಟಿ.ಸೋಮಶೇಖರ್ ಅವರು ಮೊದಲ ಬಾರಿಗೆ ಇಂದು ಮೈಸೂರು ಅರಮನೆಗೆ ಭೇಟಿ ನೀಡಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.
ಮೈಸೂರು ನಗರದ ಅಂಬಾವಿಲಾಸ ಅರಮನೆಯಲ್ಲಿ ರಾಜಮಾತೆ ಪ್ರಮೋದಾದೇವಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಉಸ್ತುವಾರಿ ಸಚಿವರಾದ ನಂತರ ರಾಜವಂಶಸ್ಥರನ್ನು ಮೊದಲು ಸೌಹಾರ್ಧ ಭೇಟಿ ಮಾಡಿದ್ದೇನೆ, ಮೈಸೂರಿನ ಅಭಿವೃದ್ಧಿ ಬಗ್ಗೆ ಸಲಹೆ ಸಹಕಾರ ಕೋರಿದ್ದೇವೆ, ಸಾಕಷ್ಟು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ರಾಜವಂಶಸ್ಥರು ಕೂಡ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರದ ಕೆಲಸಗಳನ್ನು ಹೇಳಿದ್ದೇವೆ, ಎರಡನೇ ಹಂತದ ಲಾಕ್ ಡೌನ್ ಹಿನ್ನಲೆಯಲ್ಲಿ ಜನರ ಅನಗತ್ಯ ಓಡಾಟಕ್ಕೆ ಸರ್ಕಾರ ಕಡಿವಾಣ ಹಾಕಲಿದೆ, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗದುಕೊಳ್ಳಲಾಗುವುದು ಎಂದರು.

ಸಚಿವರ ಭೇಟಿ ಬಳಿಕ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಾತನಾಡಿ, ಉಸ್ತುವಾರಿ ಸಚಿವರು ಭೇಟಿ ಮಾಡಿದ್ದು, ಜಿಲ್ಲಾಡಳಿತದಿಂದ ತೆಗದುಕೊಂಡ ಕ್ರಮಗಳನ್ನು ತಿಳಿಸಿದರು. ಪಡಿತರ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದಾರೆ. ನಮ್ಮ ಸಲಹೆ ಏನು ಇಲ್ಲ. ಎಲ್ಲ ರೀತಿಯ ಕೆಲಸಗಳನ್ನು ಮಾಡಿದ್ದಾರೆ. ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ನಮ್ಮ ಸಂಸ್ಥೆಯಿಂದಲೂ ಕೊರೊನಾ ಸೋಂಕು ನಿರ್ಮೂಲನಾ ಟನಲ್ ಗಳನ್ನು ನಿರ್ಮಾಣ ಮಾಡಲಾಗಿದೆ. ಜಿಲ್ಲಾಡಳಿತ ಸಂಪೂರ್ಣ ಕೆಲಸ ಮಾಡಿದೆ. ಈ ಸಮಸ್ಯೆಯನ್ನು ಸಮರ್ಥವಾಗಿ ಜಿಲ್ಲಾ ಅಧಿಕಾರಿಗಳು ನಿವರ್ಹಣೆ ಮಾಡಿದ್ದಾರೆ. ಕೊರೊನಾ ಸೋಂಕು ಜಿಲ್ಲಾಡಳಿತದ ಶ್ರಮದಿಂದ ಹತೋಟಿಗೆ ಬಂದಿದೆ ಎಂದು ಶ್ಲಾಘಿಸಿದರು.












Click it and Unblock the Notifications