"ತಾಕತ್ತಿದ್ದರೆ ಡಿಸಿ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿಸು''
ಮೈಸೂರು, ಮೇ 28: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ಬಗ್ಗೆ ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಜಿಲ್ಲಾಧಿಕಾರಿಗಳ ಪರವಾಗಿ ನಿಂತಿರುವ ಶಾಸಕ ಜಿ.ಟಿ ದೇವೇಗೌಡ, ನಿನಗೆ ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿಸು ಎಂದು ಸವಾಲು ಹಾಕಿದ್ದಾರೆ.
Recommended Video

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸುಖಾಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ, ದಿನ ಬೆಳಗಾದರೆ ಪೇಪರ್ ಸ್ಟೇಟ್ಮೆಂಟ್ ಮಾಡಿದರೆ ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು? ಎಂದು ಪ್ರಶ್ನಿಸಿದ್ದಾರೆ.
ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ನೀನು ಪವರ್ಫುಲ್ ಎಂಪಿ, ಪ್ರಧಾನಿ ಹಾಗೂ ಸಿಎಂ ನೀನು ಹೇಳಿದಂತೆ ಕೇಳ್ತಾರೆ. ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿ ತೋರಿಸು. ಅದನ್ನು ಬಿಟ್ಟು ಪೇಪರ್ ಸ್ಟೇಟ್ಮೆಂಟ್ ಕೊಟ್ಟು ಗೊಂದಲ ಯಾಕೆ ಮೂಡಿಸ್ತೀಯಾ? ಎಂದು ಸಂಸದ ಪ್ರತಾಪ್ ಸಿಂಹರನ್ನು ಪ್ರಶ್ನಿಸಿದ ಶಾಸಕ ಜಿ.ಟಿ ದೇವೇಗೌಡ, ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನಸಾಮಾನ್ಯರಲ್ಲಿ ಅನುಮಾನ ಸೃಷ್ಟಿಸಿವೆ ಎಂದರು.

ಶಾಸಕ ಸಾ.ರಾ ಮಹೇಶ್ ಮಾತ್ರ ಮೈಸೂರು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಜಿಟಿಡಿ, ಒಬ್ಬ ಮಾತ್ರ ಹೀರೋ, ನಾವೆಲ್ಲಾ ಝೀರೋನಾ? ನಾವೆಲ್ಲ ನಮ್ಮ ಸ್ವಂತ ಹಣ ಖರ್ಚು ಮಾಡ್ತಿದ್ದೀವಿ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು ಎಂದು ಕೇಳಿದರು.

ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಜನ ಸಾಯುತ್ತಿದ್ದಾರೆ. ಈಗ ಸರ್ಕಾರ ತೆಗೆಯಲು ಹೋಗಬೇಕಿತ್ತಾ? ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲು ಹೊರಟಿರುವುದು ಸರಿಯಲ್ಲ. ಜನರ ಕಷ್ಟ ನೋಡುವ ಬದಲು ದೆಹಲಿಗೆ ಹೋಗುವ ಅಗತ್ಯವಿತ್ತಾ? ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಅವರನ್ನು ಕೆಲಸ ಮಾಡಲು ಬಿಡಿ. ಇದರ ಬದಲಿಗೆ ಸರ್ಕಾರ ಬೀಳಸಲು ಪ್ರಯತ್ನ ಮಾಡಿರೋದು ಸರಿಯಲ್ಲ ಎಂದರು.












Click it and Unblock the Notifications