ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಈಶ್ವರಪ್ಪ
ಮೈಸೂರು, ಜೂನ್.10: ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಹಿರಿಯ ಬಿಜೆಪಿ ನಾಯಕ, ಶಾಸಕ ಕೆ.ಎಸ್. ಈಶ್ವರಪ್ಪ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಾವು ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದರೆ, ಈಗ ಕಾಂಗ್ರೆಸ್ಸಿಗರೇ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತಿದ್ದಾರೆ. ರಾಜಕೀಯ ಇತಿಹಾಸದಲ್ಲಿಯೇ ಕಾಂಗ್ರೆಸ್ ಶಾಸಕರು, ಅಧ್ಯಕ್ಷರನ್ನು ಮಾರಾಟ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಬಹುಮತ ಸಾಧಿಸಿತ್ತು. ಅದು ಯಡಿಯೂರಪ್ಪನವರ ಶಕ್ತಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವವರು ಕಾಂಗ್ರೆಸ್ ನ ಅತೃಪ್ತರು.

ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಈಗ ಯಾರು ಅಂತ ನಾನು ಹೇಳಲಾರೆ. ನೀವೇ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದು ಗುಟ್ಟು ಬಿಡದೆ ಉತ್ತರಿಸಿದರು.
ಕೆಲವು ದಿನಗಳ ಹಿಂದೆಯಷ್ಟೇ ಈಶ್ವರಪ್ಪ ಅವರು ಸಚಿವ ಸ್ಥಾನ ಸಿಕ್ಕದೆ ಅತೃಪ್ತಿಯಿಂದಿರುವ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಬಹುದು ಎಂದು ಆಹ್ವಾನ ನೀಡಿದ್ದರು. ಬಹುತೇಕ ಶಾಸಕರು ತಮಗೆ ಮಂತ್ರಿ ಗಿರಿ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ. ಆ ಶಾಸಕರು ನಿರಾಶರಾಗುವ ಅಗತ್ಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ನೆರವಾಗಬೇಕು ಎಂದು ಹೇಳಿಕೆ ನೀಡಿದ್ದರು.












Click it and Unblock the Notifications