ಬಿ.ಸಿ ಪಾಟೀಲರೇ ನಿಜವಾದ ಊಸರವಳ್ಳಿ: ಸಾ.ರಾ ಮಹೇಶ್ ಟೀಕೆ
ಮೈಸೂರು, ಸೆಪ್ಟೆಂಬರ್ 8: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿರುವ ಬಿ.ಸಿ ಪಾಟೀಲರೇ ನಿಜವಾದ ಊಸರವಳ್ಳಿ ಎಂದು ಶಾಸಕ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ.
ಎಚ್ಡಿಕೆ ಮೇಲೆ ಬಿ.ಸಿ ಪಾಟೀಲರ ಅರೋಪದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಉತ್ತರಿಸಿದ ಅವರು, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಆಪ್ತರೇ ಆಗಿರುವುದರಿಂದ ಕನಲಿ ಹೋಗಿರುವ ಕೃಷಿ ಸಚಿವ ಬಿ.ಸಿ ಪಾಟೀಲರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾ ಮಟ್ಟಹಾಕಲು ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾಗ ಬಿಸಿ ಮುಟ್ಟಿಸಿದ್ದರಿಂದಲೇ ದೇಶಾಂತರ ಓಡಿಹೋಗಿ ತಲೆಮರೆಸಿಕೊಂಡಿದ್ದವರು ಜಾಮೀನು ಪಡೆದು ಬಂದಿದ್ದು, ಇದಕ್ಕೆ ತೆರೆಮರೆಯಲ್ಲಿ ನಿಂತು ವ್ಯವಸ್ಥೆ ಮಾಡಿದವರು ಗೊತ್ತಿದೆ ಎಂದು ಬಿಜೆಪಿ ಹೆಸರೇಳದೆ ಟೀಕಿಸಿದರು.

ಅಧಿಕಾರದ ಆಸೆಗಾಗಿ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವರಿಗೆ ಕರಗತವಾಗಿದೆ. ಊಸರವಳ್ಳಿಯನ್ನು ನಾಚಿಸುವಂತೆ ನಾಲಗೆಯ ಬಣ್ಣವನ್ನೂ ಬದಲಿಸುವ ಇಂತಹ ಬೃಹಸ್ಪತಿಗಳು ಕುಮಾರಸ್ವಾಮಿ ಅವರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಎಚ್ಚರಿಸಿದ್ದಾರೆ.
ಈ ಹಿಂದೆ ಪೊಲೀಸ್ ಇಲಾಖೆಯಲ್ಲಿದ್ದ ಪಾಟೀಲರಿಗೆ ಇಂತಹ ಮಾಫಿಯಾಗಳ ಬಗ್ಗೆ ಅರಿವಿಲ್ಲ ಎಂದರೆ ಅವರು ಪಾಲಿಸಿದ ವೃತ್ತಿನಿಷ್ಠೆ ಏನೆಂಬುದು ನಗೆಪಾಟಲಿನ ಸಂಗತಿ. ಎಂತೆಂತಹ ಊಸರವಳ್ಳಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದರು ಎಂಬ ಬಗ್ಗೆ ಮರುಕವಿದೆ ಎಂದು ಶಾಸಕ ಸಾ.ರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.
ಖಾವಿ ತೊಟ್ಟ ಮಾರ್ಜಾಲ ಸನ್ಯಾಸಿಯಂತೆ ಖಾಕಿ ಕಳಚಿ ಖಾದಿ ಧರಿಸಿದ ನಂತರ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಬೇಕಾಗಿಲ್ಲ ಎಂಬ ಉಡಾಫೆಯ ಪ್ರತಿಕ್ರಿಯೆ ನೀಡುತ್ತಿರುವ ಬಿ.ಸಿ ಪಾಟೀಲರು ನಿಜವಾದ ಊಸರವಳ್ಳಿ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇರುವುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಹೇಳುತ್ತಿರುವ ಪಾಟೀಲರು ಎಷ್ಟು ಮಂದಿ ವಿರುದ್ಧ ಕೇಸು ಹಾಕಿದ್ದಾರೆ? ಎಂಬ ವಿವರವನ್ನು ಜನತೆಯ ಮುಂದಿಟ್ಟು ನಂತರ ಮಾತಾಡಲಿ ಎಂದು ಕಿಡಿಕಾರಿದರು.












Click it and Unblock the Notifications