ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ: ಮೈಸೂರಿನಲ್ಲಿ ಶಾಸಕ ಸೋಮಶೇಖರ್ ಬಂಧನ
ಮೈಸೂರು, ಸೆಪ್ಟೆಂಬರ್ 4: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನಲ್ಲೂ ಪ್ರತಿಭಟನೆ ಕಾವೇರಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
DK Shivakumar Arrest LIVE Updates: ಡಿ.ಕೆ.ಶಿವಕುಮಾರ್ ಇಂದು ಕೋರ್ಟ್ಗೆ ಹಾಜರು
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು-ಊಟಿ ಹೆದ್ದಾರಿಯ ಗುಂಡೂರಾವ್ ನಗರದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದರು.
ಇದೇ ವೇಳೆ ಮಾತನಾಡಿದ ಶಾಸಕ ಸೋಮಶೇಖರ್, "ಇದೊಂದು ರಾಜಕೀಯ ಪ್ರೇರಿತ ಬಂಧನ. ಬಿಜೆಪಿಯವರು ತಮ್ಮ ಆಡಳಿತ ವೈಫಲ್ಯ ಮುಚ್ಚಿ ಹಾಕಲು ಹಾಗೂ ಕಾಂಗ್ರೆಸ್ ಪ್ರಬಲ ನಾಯಕರನ್ನು ಬೆದರಿಸಲು ಈ ರೀತಿ ನಡೆದುಕೊಳ್ಳುತ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಭಾಷಾ ಸಂಸ್ಥಾನದ ಹುಣಸೂರು ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಡಿ.ಕೆ.ಶಿವಕುಮಾರ್ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.
ಇತ್ತ ಮೈಸೂರಿನ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ, "ಡಿಕೆಶಿ ಅವರ ಬಂಧನ ಬಿಜೆಪಿ ಸೇಡಿನ ದ್ವೇಷದ ರಾಜಕಾರಣವಾಗಿದೆ. ಕಾಂಗ್ರೆಸ್ ಪಕ್ಷ ಕಾನೂನಾತ್ಮಕವಾಗಿ ಡಿಕೆಶಿ ಪರ ನಿಲ್ಲಲಿದೆ. ಅವರು ಶೀಘ್ರದಲ್ಲೇ ಹೊರಬರುತ್ತಾರೆ ಎಂಬ ವಿಶ್ವಾಸವಿದೆ" ಎಂದರು.