ಮಾಜಿ ಸಚಿವ ತನ್ವೀರ್ ಸೇಠ್ ಹತ್ಯೆ ಯತ್ನ, 5 ಮಂದಿ ವಶಕ್ಕೆ
ಮೈಸೂರು, ನವೆಂಬರ್ 18 : ಮೈಸೂರಿನ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ವಶಕ್ಕೆ ಪಡೆಯಲಾಗಿದೆ. ಚಾಕುವಿನಿಂದ ಚುಚ್ಚಿದ ಆರೋಪಿ ಪರ್ಹಾನ್ ಪಾಷಾ ಪೊಲೀಸರ ವಶದಲ್ಲಿದ್ದಾನೆ.
ತನ್ವೀರ್ ಸೇಠ್ ಹತ್ಯೆ ಮಾಡಲೆಂದೇ ಹಲ್ಲೆ ನಡೆಸಿದ್ದೆ ಎಂದು ಆರೋಪಿ ಪರ್ಹಾನ್ ಪಾಷಾ ಪೊಲೀಸರ ತನಿಖೆ ವೇಳೆ ಹೇಳಿಕೆ ನೀಡಿದ್ದಾನೆ. ತನ್ವೀರ್ ಸೇಠ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಬೇಗ ಸುಧಾರಿಸಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಮಾಜಿ ಸಚಿವ ತನ್ವೀರ್ ಸೇಠ್ ಹತ್ಯೆ ಪ್ರಕರಣದ ಹಿಂದೆ ಸಂಘಟನೆಯೊಂದರ ಕೈವಾಡವಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಇದುವರೆಗೂ 5 ಜರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಇತರ ಆರೋಪಿಗಳಿಗೆ ಹುಡುಕಾಟ ನಡೆದಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, "ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆಯಾಗಿರುವ ಕುರಿತು ಮುಖ್ಯಮಂತ್ರಿ @BSYBJP ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ತಿಳಿದು ತೀವ್ರ ನೋವಾಗಿದೆಯೆಂದು ತಿಳಿಸಿದರು. ಪೊಲೀಸ್ ಅಧಿಕಾರಿಗಳೊಂದಿಗೆ ಚಿಕಿತ್ಸೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ" ಎಂದು ಹೇಳಿದ್ದಾರೆ.
ಆರೋಪಿ ಕೆಲಸ ಕೇಳಲು ಹೋದಾಗ ಹಾಗೂ ಇತರ ಸಹಾಯ ಕೇಳಲು ಹೋಗಿದ್ದಾಗ ಸರಿಯಾಗಿ ಉಪಚರಿಸಲಿಲ್ಲ. ಇಂತಹ ಜನಪ್ರತಿನಿಧಿ ಇರುವುದು ಬೇಡ ಎಂದು ಹಲ್ಲೆ ನಡೆಸಿದೆ. ಇದಕ್ಕೂ ಮುನ್ನ ಮೂರು ಬಾರಿ ಪ್ರಯತ್ನ ನಡೆಸಿ ವಿಫಲನಾಗಿದ್ದೆ ಎಂದು ಆರೋಪಿ ಹೇಳಿದ್ದಾನೆ.
ತನ್ವೀರ್ ಸೇಠ್ ಭಾನುವಾರ ರಾತ್ರಿ 11.45ರ ಸುಮಾರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ವಾಪಸ್ ತೆರಳುವ ವೇಳೆ ಪರ್ಹಾನ್ ಪಾಷಾ ಹಲ್ಲೆ ನಡೆಸಿದ್ದ. ಕುತ್ತಿಗೆ ಭಾಗದಲ್ಲಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, "ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ" ಎಂದು ಹೇಳಿದ್ದಾರೆ.












Click it and Unblock the Notifications