ಮೈಸೂರಲ್ಲಿ ಹೆಚ್ಚಿದ ಸೋಂಕು; ವೈದ್ಯಕೀಯ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲು ತನ್ವೀರ್ ಸೇಠ್ ಮನವಿ
ಮೈಸೂರು, ಆಗಸ್ಟ್ 06: ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎನ್.ಆರ್. ಕ್ಷೇತ್ರಕ್ಕೆ ವೈದ್ಯರು ಹಾಗೂ ಪ್ಯಾರಾಮೆಡಿಕಲ್ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವಂತೆ ಸ್ಥಳೀಯ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿ ತೀರಾ ಕಡಿಮೆ ಇದ್ದಾರೆ. ಇದರಿಂದ ಈಗಿರುವ ವೈದ್ಯಕೀಯ ಸಿಬ್ಬಂದಿಗೆ ಕಾರ್ಯ ಒತ್ತಡ ಹೆಚ್ಚಾಗುತ್ತಿದ್ದು, ರೋಗಿಗಳು ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾಯುತ್ತಿದ್ದಾರೆ. ಅಲ್ಲದೇ, ಹಾಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಲ್ಲಿ ಶೇ.40 ಮಂದಿ 50 ವರ್ಷ ಮೇಲ್ಪಟ್ಟವರಿದ್ದಾರೆ. ಸರ್ಕಾರದ ಆದೇಶದ ಪ್ರಕಾರ ಇವರು ಕೋವಿಡ್ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೂ, ಅದು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಇವರ ವಯೋಮಿತಿಯ ಷರತ್ತನ್ನು ಸಡಿಲಗೊಳಿಸಬೇಕು ಎಂದರು.
ಅಲ್ಲದೇ ಸರ್ಕಾರಿ ಮತ್ತು ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಬೇಕು. ಸದ್ಯದ ಪರಿಸ್ಥಿತಿ ಹತೋಟಿಗೆ ಬರುವವರೆಗೂ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

ಮೈಸೂರು ಜಿಲ್ಲೆಗೆ ಅಂದಾಜು 300 ವೆಂಟಿಲೇಟರ್ ಗಳ ಅಗತ್ಯವಿದ್ದು, ಒದಗಿಸಲು ಸರ್ಕಾರ ಮುಂದಾಗಬೇಕು. ಈಗಾಗಲೇ ಬಹುತೇಕ ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಉಪಕರಣ ಹಾಗೂ ಔಷಧಗಳನ್ನು ಖರೀದಿಸಲು ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಈ ಹಣದಲ್ಲಿ ಆಸ್ಪತ್ರೆಗಳಿಗೆ ಅಗತ್ಯವಿರುವ ಯಂತ್ರಗಳ ಖರೀದಿಗೆ ಸರ್ಕಾರ ಕ್ರಮವಹಿಸಬೇಕೆಂದು ಒತ್ತಾಯಿಸಿ ಶಾಸಕ ತನ್ವೀರ್ ಸೇಠ್, ಪತ್ರದ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.












Click it and Unblock the Notifications