ಎಚ್ಡಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ಪುತ್ರ ಯತೀಂದ್ರ
ಮೈಸೂರು, ಜುಲೈ 2: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಕುರಿತು ಸಿದ್ದರಾಮಯ್ಯ ಹಾಗೂ ಇತರೆ ನಾಯಕರ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡುವ ಮೂಲಕ ಅಪ್ಪನ ಬೆನ್ನಿಗೆ ನಿಂತಿರುವ ಯತೀಂದ್ರ ಸಿದ್ದರಾಮಯ್ಯ, "ಸಿದ್ದರಾಮಯ್ಯ ಅವರು ತಾವಾಗಿಯೇ ಜೆಡಿಎಸ್ ಬಿಟ್ಟು ಬರಲಿಲ್ಲ. ಜೆಡಿಎಸ್ನಿಂದ ಉಚ್ಚಾಟನೆ ಮಾಡಿದ್ದರಿಂದ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್ ಮುಖಂಡರ ಪಾಪದ ಕೊಡ ತುಂಬುವುದಕ್ಕೆ ಅವರು ಯಾವುದೇ ಪಾಪ ಮಾಡಿಲ್ಲ,'' ಎಂದು ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಶಾಸಕ ಯತೀಂದ್ರ, "ಸಿದ್ದರಾಮಯ್ಯ ಮತ್ತು ಅವರ ಸಹಪಾಠಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಸಿದ್ದರಾಮಯ್ಯ ಅವರಿಗೆ ಒಳ್ಳೆಯದೇ ಆಯಿತು. ಈಗ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದೇವೆ. ಆದರೆ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ,'' ಎಂದು ಜೆಡಿಎಸ್ ಪಕ್ಷದ ನಾಯಕರನ್ನು ಕುಟುಕಿದರು.











Click it and Unblock the Notifications