Monsoon rain: ಮುಂಗಾರು ವಿಕೋಪ ಎದುರಿಸಲು ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳಿವು
ಮೈಸೂರು, ಮೇ, 28: ಮುಂಗಾರು ಮಳೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈಗಾಗಲೇ ಹಲವು ಜಿಲ್ಲೆಗಲ್ಲಿ ಈ ಮಳೆಯಿಂದ ಯಾವುದೇ ಅನಾಹುತಗಳು ಸಂಭವಿಸಬಾರದೆಂದು ಅಧಿಕಾರಿಗಳು ಮುಂಜಾಗ್ರತೆ ಕ್ರಮಗಳಿಗೆ ಮುಂದಾಗಿದ್ದಾರೆ. ಅದೇ ರೀತಿ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಯಾವ ರೀತಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಭೆ ಮೂಲಕ ಮಾಹಿತಿಯನ್ನು ರವಾನಿಸಿದ್ದಾರೆ.
ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿಯೂ ಜನ, ಜಾನುವಾರುಗಳ ಕ್ಲಿಷ್ಟಕರ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ಹಾಗೂ ತಾಲೂಕು ಹಂತದ ಅಧಿಕಾರಿ, ಸಿಬ್ಬಂದಿಗಳು ಸನ್ನದ್ಧರಾಗಿರಬೇಕು. ಕರ್ತವ್ಯ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಾನ್ಸೂನ್ ಸಿದ್ಧತೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ನಾವುಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಆದ್ದರಿಂದ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಈ ಹಿಂದೆ ತೊಂದರೆಗೊಳಗಾಗಿದ್ದ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳನ್ನು ತೆರೆಯುವುದು, ಅಗತ್ಯವಿದ್ದಲ್ಲಿ ಜನರ ಸ್ಥಳಾಂತರಕ್ಕೆ ಸಿದ್ಧರಾಗಿರಬೇಕು ಎಂದು ತಿಳಿಸಿದರು.
ಅಲ್ಲದೆ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ಗುರುತಿಸಿ ತೆರವುಗೊಳಿಸುವುದು, ರಸ್ತೆಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಹಾಗೆಯೆ ಶಿಥಿಲಾವಸ್ಥೆಯಲ್ಲಿರುವ ಮನೆಗಳು, ಶಾಲಾ ಕಟ್ಟಡಗಳಿಂದ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ತಾಲೂಕು ಹಂತದಲ್ಲಿ ಕಂಟ್ರೋಲ್ ರೂಂ ತೆರೆದು 24*7 ಕಾರ್ಯನಿರ್ವಹಿಸಬೇಕು. ಯಾವುದೇ ಜೀವಹಾನಿ ಪ್ರಕರಣಗಳಿಗೆ 48 ಗಂಟೆಯೊಳಗೆ ಪರಿಹಾರ ಪಾವತಿಸಲು ವಿಳಂಬವಾಗಬಾರದು. ಹಾಗೂ ಈಗಲೇ ತಾಲೂಕು ಮಟ್ಟದಲ್ಲಿರುವ ವಿಪತ್ತು ನಿರ್ವಹಣಾ ತಂಡಗಳನ್ನು ಸಕ್ರಿಯಗೊಳಿಸಿ ಎಂದರು.
ಕೆರೆ ದಂಡೆಗಳನ್ನು ಪರೀಕ್ಷಿಸಿ ಎಲ್ಲಾದರೂ ಸೋರಿಕೆ ಇದ್ದರೆ ತಕ್ಷಣ ಸರಿಪಡಿಸಿ, ಕೆರೆಗಳ ಅಕ್ಕಪಕ್ಕದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು. ಮತ್ತು ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಲು ತಮ್ಮಲ್ಲಿ ಸಾಕಷ್ಟು ಹಣ ಇದ್ದು, ಜಾಯಿಂಟ್ ಸರ್ವೇ ವರದಿ ಪಡೆದು ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಿ ಎಂದರು.
ಜೊತೆಗ ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಅಗತ್ಯ ಬೋಟ್ ಗಳು, ತಜ್ಞರು ಹಾಗೂ ಅಗತ್ಯ ಪರಿಕರಗಳೊಂದಿಗೆ ಪರಿಸ್ಥಿತಿ ನಿಭಾಯಿಸಲು ಸಿದ್ಧರಿರಬೇಕು. ಸಿಡಿಲು ಸಂಭವಿಸಿದಾಗ ಇದರಿಂದ ಹೇಗೆ ರಕ್ಷಿಸಿಕೊಳ್ಳಲು ಎನ್ನುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಇನ್ನು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿ, ನಗರದ 65 ವಾರ್ಡ್ಗಳ ಪೈಕಿ 6 ವಾರ್ಡ್ಗಳ ಕೆಲವು ಕಡೆ ಸಮಸ್ಯೆಗಳಿದ್ದು, ತಕ್ಷಣಕ್ಕೆ ಈ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಉಪವಿಭಾಗಾಧಿಕಾರಿ ಕಮಲಾಬಾಯಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications