ಜಮೀರ್ ಅಹ್ಮದ್ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಒತ್ತಾಯ
ಮೈಸೂರು, ಏಪ್ರಿಲ್ 21: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ಖಾನ್ ನೇರ ಕಾರಣರಾಗಿದ್ದು, ಕೂಡಲೇ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕೊರೊನಾ ಸೋಂಕಿನಿಂದ ಮೃತಪಟ್ಟ ವೈದ್ಯರ ಅಂತ್ಯಕ್ರಿಯೆಗೂ ಅಡ್ಡಿ
ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ನಡೆಸಿದ ಹಲ್ಲೆ ಖಂಡನೀಯವಾಗಿದೆ. ಈ ಪ್ರಕರಣದಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಸಿಬ್ಬಂದಿಯ ನಡೆಯೇ ತಪ್ಪು ಎಂಬಂತೆ ಮಾತನಾಡಿರುವ ಶಾಸಕರ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಬೇಕು ಎಂದು ಆಗ್ರಹಿಸಿದರು.
ಜಮೀರ್ ಅಹಮದ್ ಖಾನ್ಗೆ ಸಿಎಎ, ಎನ್ಆರ್ಸಿ ಕಾಯ್ದೆ ಬಗ್ಗೆ ಗೊತ್ತಾಗುತ್ತದೆ, ಇಸ್ರೇಲ್-ಪ್ಯಾಲೆಸ್ತೇನ್ ಗೊಂದಲವೂ ಅರ್ಥ ಆಗುತ್ತದೆ. ಆದರೆ ಕೊರೊನಾ ವೈರಸ್ ಪರೀಕ್ಷೆಗೆ ಬಂದವರನ್ನು ಹೊಡೆದದ್ದು ಅಕ್ಷ್ಯಮ್ಯ ಅಪರಾಧ ಎಂಬುದು ಅರ್ಥವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.