MUDA Scam: ಮುಡಾ ಮಾಜಿ ಅಧ್ಯಕ್ಷರ ವಿರುದ್ಧ ಗಂಭೀರ ಆರೋಪ
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದು, ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಮುಡಾ ವಿರುದ್ಧ ದಿನಕ್ಕೊಂದು ಆರೋಪ ಕೇಳಿಬರುತ್ತಿದ್ದು, ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ, ಇದೀಗ ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಅಧಿಕಾರದ ಅವಧಿಯಲ್ಲಿ ಒಂದೇ ದಿನದಲ್ಲಿ 848 ನಿವೇಶನಗಳನ್ನು ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಯುಕ್ತರ ಅನುಮೋದನೆ ಇಲ್ಲದಿದ್ದರೂ ನಿವೇಶನಗಳನ್ನು ಬಿಡುಗಡೆಗೊಳಿಸಿಕೊಂಡಿದ್ದಾರೆ ಎಂದು ಅಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ರಾಜ್ಯ ಸರ್ಕಾರಕ್ಕೆ ಬರೆದಿದ್ದಾರೆ ಎನ್ನಲಾದ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎಚ್.ವಿ.ರಾಜೀವ್ ಮುಡಾ ಅಧ್ಯಕ್ಷರಾಗಿದ್ದ ಸಂದರ್ಭ ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದರೂ ತಮ್ಮ ಅನುಮೋದನೆ ಇಲ್ಲದೆ ನಿವೇಶನಗಳನ್ನು ಬಿಡುಗಡೆಗೊಳಿಸಿಕೊಂಡಿದ್ದಾರೆ ಎಂದು 2022ರ ಫೆಬ್ರವರಿ 22ರಂದು ಸರ್ಕಾರದ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಡಿ.ಬಿ.ನಟೇಶ್ ಅವರು ಬರೆದಿದ್ದರು ಎನ್ನಲಾದ ಪತ್ರದಲ್ಲಿ ಕೆಲವೊಂದು ಗಂಭೀರ ವಿಚಾರಗಳನ್ನು ತಿಳಿಸಲಾಗಿದೆ.
ನಟೇಶ್ ಬರೆದಿರುವ ಪತ್ರದಲ್ಲಿ ಏನಿದೆ?
ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ, ಬಲ್ಲಹಳ್ಳಿ ಗ್ರಾಮದ 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಈ ವ್ಯಾಜ್ಯ ನ್ಯಾಯಾಲಯದಲ್ಲಿ ಇರುವ ಕಾರಣ ಬಡಾವಣೆಗಳ ನಿವೇಶನಗಳ ಹಕ್ಕುಗಳನ್ನು ಮುಡಾ ವರ್ಗಾವಣೆ ಮಾಡಬಾರದೆಂದು ನ್ಯಾಯಾಲಯ ಆದೇಶ ನೀಡಿತ್ತು. ಹೀಗಿದ್ದರೂ ರಾಜೀವ್ ಅವರು ಖಾತೆ ಮಾಡಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಮತ್ತೊಂದು ಪತ್ರದಲ್ಲಿ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ 252.10 ಎಕರೆಯಲ್ಲಿ ಬಡಾವಣೆ ವಿನ್ಯಾಸ ನಕ್ಷೆ ಅನುಮೋದನೆಗೆ ಸಂಬಂಧಿಸಿದಂತೆ ಅಗತ್ಯವಿರುವ ಕಡತಗಳನ್ನು ಆಯುಕ್ತರ ಕಚೇರಿಗೆ ಸಲ್ಲಿಸುವಂತೆ ಅಧ್ಯಕ್ಷರಿಗೆ 2022ರ ಫೆಬ್ರವರಿ 16ರಂದು ಬರೆದಿರುವ ಪತ್ರವೂ ಈಗ ಬಹಿರಂಗವಾಗಿದ್ದು, ಅದು ಕೂಡ ವೈರಲ್ ಆಗಿದೆ.
ಅಕ್ರಮ ನಡೆದಿಲ್ಲ ಎಂದ ರಾಜೀವ್
ಇನ್ನು ವೈರಲ್ ಆಗಿರುವ ಪತ್ರದ ಬಗ್ಗೆ ಅಂದಿನ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಪ್ರತಿಕ್ರಿಯೆ ನೀಡಿದ್ದು, ಮುಡಾ ಆಯುಕ್ತರು ಸರ್ಕಾರಕ್ಕೆ ಬರೆದಿರುವ ಪತ್ರದಂತೆ ಯಾವುದೇ ಅಕ್ರಮ ನಡೆದಿಲ್ಲ. ಪತ್ರ ಬರೆದಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ 848 ನಿವೇಶನ ಬಿಡುಗಡೆಯನ್ನು ಮುಡಾ ಸಾಮಾನ್ಯ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.












Click it and Unblock the Notifications