MUDA: 50:50 ಅನುಪಾತದಲ್ಲಿ ಮುಡಾ ಸೈಟು ಪಡೆದವರಿಗೆ ಶಾಕ್; ನಿವೇಶನ ರದ್ದು ಪಡಿಸಲು ಸಭೆಯಲ್ಲಿ ನಿರ್ಧಾರ
ತೀವ್ರ ವಿವಾದ ಸೃಷ್ಟಿಸಿರುವ 50:50 ಅನುಪಾತದಡಿ ನಿವೇಶನಗಳನ್ನು ಹಂಚಿಕೆ ಮಾಡಿರುವುದನ್ನು ರದ್ದುಪಡಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಇದರಿಂದ 50:50 ಹೆಸರಿನಲ್ಲಿ ಬದಲಿ ನಿವೇಶನಗಳನ್ನು ಪಡೆದುಕೊಂಡಿರುವ ಮಾಲೀಕರು ಹಾಗೂ ಖರೀದಿಸಿದವರಿಗೆ ದೊಡ್ಡ ಆಘಾತ ಎದುರಾಗಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿ ಬಂದ ಬಳಿಕ, ಮುಡಾದಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದು, ಈ ಮಹತ್ವದ ನಿರ್ಧಾರ ಮಾಡಲಾಗಿದೆ.
ಎಂಟು ತಿಂಗಳ ಸುದೀರ್ಘ ಸಮಯದ ಬಳಿಕ ಗುರುವಾರ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಮುಡಾ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿ ಶಾಸಕ ಟಿ.ಎಸ್.ಶ್ರೀವತ್ಸ, ಮುಡಾದಲ್ಲಿ 50:50 ನಿವೇಶನಗಳ ಹಂಚಿಕೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದರಿಂದ ಎಲ್ಲವನ್ನು ರದ್ದು ಮಾಡಿ ವಾಪಸ್ ಪಡೆಯಬೇಕು ಎಂದು ಸಲಹೆ ನೀಡಿದರು. ಶಾಸಕ ಶ್ರೀವತ್ಸ ಇದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೂ ಪತರ ಪತ್ರ ಬರೆದು ಮನವಿ ಮಾಡಿದ್ದರು.

ಶಾಸಕ ಶ್ರೀವತ್ಸ ಅವರ ಬೇಡಿಕೆಗೆ ದನಿಗೂಡಿದ ಶಾಸಕ ಕೆ.ಹರೀಶ್ ಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ಆದರೆ, ಬೇರೆಯವರು ಹಿಂತಿರುಗಿಸುತ್ತಾರೋ ಅಥವಾ ಇಲ್ಲವೋ ಎಂದು ನಾವು ಕಾಯುತ್ತಾ ಕುಳಿತುಕೊಳ್ಳಬಾರದು. ನಿವೇಶನಗಳ ಹಂಚಿಕೆ ರದ್ದುಪಡಿಸಿ ತಕ್ಷಣವೇ ಮುಡಾ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಮಾತನಾಡಿ, 50:50 ಅನುಪಾತದಡಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಬೇಕು ಎನ್ನುವ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂದರು. ಆಯುಕ್ತ ರಘುನಂದನ್, ಮುಡಾದಲ್ಲಿ ಆಗಿರುವ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಮಾಡಿರುವ ತನಿಖೆ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, 50:50 ಅನುಪಾತದಡಿ ನಿವೇಶನಗಳನ್ನು ಹಂಚಿಕೆ ಮಾಡಿರುವುದನ್ನು ರದ್ದುಪಡಿಸಲು ಕೈಗೊಂಡಿರುವ ತೀರ್ಮಾನವನ್ನು ಒಪ್ಪುತ್ತೇವೆ. ಆದರೆ ಪಿ.ಎನ್. ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ವರದಿ ಬಂದ ಬಳಿಕ ಹಂಚಿಕೆ ಮಾಡಿರುವ ನಿವೇಶನಗಳನ್ನು ಜಪ್ತಿ ಮಾಡುವ ಬಗ್ಗೆ ನಿರ್ಣಯ ಮಾಡಿ ಅಂಗೀಕರಿಸಿ ಮುಂದಿನ ಪ್ರಕ್ರಿಯೆ ಆರಂಭಿಸುವುದು ಸೂಕ್ತ ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿಯ ಮಾತಿಗೆ ಎಲ್ಲ ಸದಸ್ಯರಯ ಸಹಮತ ವ್ಯಕ್ತಪಡಿಸಿದರು.












Click it and Unblock the Notifications