ಪ್ರತಾಪ್ ಒಬ್ಬ ಅಪ್ರಬುದ್ಧ ರಾಜಕಾರಣಿ: ಸಿಎಂ ಸಿದ್ದು
ಮೈಸೂರು, ಏ. 15- ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕೂ ಮುನ್ನ, ಇಂದು ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಈ ಬಗ್ಗೆ ಆಯೋಗಕ್ಕೆ ದೂರು ನೀಡುವುದಾಗಿ ಪ್ರತಾಪ ಸಿಂಹ ಗಂಭೀರ ಆರೋಪ ಮಾಡಿದ್ದರು.
ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಚ್ ವಿಶ್ವನಾಥ್ ಅವರ ಪರ ಪ್ರಚಾರಕ್ಕಾಗಿ ಮೈಸೂರಿನ ರಾಮಕೃಷ್ಣ ನಗರದಲ್ಲಿ ತಮ್ಮ ನಿವಾಸದಲ್ಲಿ ತಂಗಿರುವ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವುದೇ ಕಾರಣಕ್ಕೂ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಂಡಿಲ್ಲ. ಹಣ ಸಾಗಾಣಿಕೆ ಮಾಡುವ ವಿಷಯ ಯಾವುದೂ ನನ್ನ ಗಮನಕ್ಕೆ ಬಂದಿಲ್ಲ' ಎಂದು ಹೇಳಿದರು.

'ಪ್ರತಾಪ ಸಿಂಹ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲ ಸತ್ಯಕ್ಕೆ ದೂರವಾದುದು. ಹಣ ಸಾಗಿಸುವ ಕೆಲಸವನ್ನಾಗಲೀ, ಆಡಳಿತ ಯಂತ್ರವನ್ನಾಗಲಿ ದುರುಪಯೋಗ ಮಾಡಿಕೊಂಡಿಲ್ಲ. ಅಂಥ ಕೆಲಸವನ್ನು ಮಾಡುವುದೂ ಇಲ್ಲ' ಎಂದು ಅವರು ತಿಳಿಸಿದರು.
ಇದೇ ವೇಳೆ ನಿಮ್ಮ ಆಪ್ತ ಸಹಾಯಕ ಕುಮಾರ್ ಅವರ ನಿವಾಸದ ಮೇಲೆ ಹಣ ಇರುವ ಶಂಕೆ ಹಿನ್ನೆಲೆಯಲ್ಲಿ ದಾಳಿ ನಡೆದಿದೆಯಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅವರ ಮನೆಯಲ್ಲಿ ಹಣ ಇರಿಸುವಂತಹ ಪರಿಸ್ಥಿತಿಯೂ ಇಲ್ಲ. ಇದೆಲ್ಲ ಸತ್ಯಕ್ಕೆ ದೂರವಾದುದು' ಎಂದು ಅವರು ಸೂಕ್ಷ್ಮವಾಗಿ ಹೇಳಿದರು.

ಒಂದು ವೇಳೆ ನಮ್ಮ ನಿರೀಕ್ಷೆಯಂತೆ 18-20 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸದಿದ್ದರೂ ಕೂಡ ಐದು ವರ್ಷದ ಅವಧಿಗೆ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಕಡಿಮೆ ಸ್ಥಾನಗಳು ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಯಾವುದೇ ಕಟ್ಟಪ್ಪಣೆಯನ್ನೂ ಪಕ್ಷದ ಹೈಕಮಾಂಡ್ ಕರ್ನಾಟಕವೂ ಸೇರಿದಂತೆ ನಮ್ಮ ಸರ್ಕಾರಗಳಿರುವ ಯಾವುದೇ ರಾಜ್ಯದ ಮುಖ್ಯಮಂತ್ರಿಗೂ ವಿಧಿಸಿಲ್ಲ ಎಂದು ಹೇಳಿದರು.












Click it and Unblock the Notifications