ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು, ಸೆಪ್ಟೆಂಬರ್ 16: ಭಾರತೀಯ ಜನತಾ ಪಕ್ಷದ ಮೈಸೂರು ನಗರ ಘಟಕದ ವತಿಯಿಂದ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಗಾಂಧಿ ವೃತ್ತದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು, ಮಾಜಿ ಡಿ.ವೈ.ಎಸ್.ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ವೋಚ್ಛ ನ್ಯಾಯಾಲಯ ಸಿಬಿಐ ತನಿಖೆಗೆ ನೀಡಿದೆ. ಅಂದಿನ ಗೃಹ ಸಚಿವ ಹಾಗೂ ಹಾಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರೂ ಈ ಪ್ರಕರಣದ ಆರೋಪಿಯಾಗಿದ್ದು ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಇದೇ ವೇಳೆ ಪ್ರತಿಭಟನಾಕಾರರು ಸರ್ಕಾರ ಮತ್ತು ಜಾರ್ಜ್ ವಿರುದ್ಧ ಘೋಷಣೆ ಕೂಗಿದರು.
ಒಡೆಯರ್ ವಿರುದ್ಧ ಅಪಮಾನಕಾರಿ ಹೇಳಿಕೆ ಹಿನ್ನೆಲೆ: ಸಿಎಂ ವಿರುದ್ಧ ಪ್ರತಿಭಟನೆ
ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾ ಹಾಗೂ ಅರಮನೆ ಉಳಿಸಿ ಹೋರಾಟ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಶನಿವಾರ ಬೆಳಿಗ್ಗೆ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಪ್ರತಿಭಟನಾಕಾರರು ಮಾತನಾಡಿ ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ಮಹಾರಾಜ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಬೇಕು. ಮುಖ್ಯಮಂತ್ರಿಗಳು ದಿವಂಗತ ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಹಗುರವಾಗಿ ಮಾತನಾಡಿದ್ದಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಸುಪ್ರೀಂಕೋರ್ಟ್ ನಲ್ಲಿರುವ ಮೈಸೂರು ರಾಜವಂಶಸ್ಥರ ಸ್ವತ್ತಿನ ವಿರುದ್ಧವಾಗಿ ಸಲ್ಲಿಸಿರುವ ಎಲ್ಲಾ ದಾವೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.