ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮೈಸೂರು ಬ್ರಾಹ್ಮಣ ಸಂಘದಿಂದ ಪ್ರತಿಭಟನೆ
ಮೈಸೂರು, ಏಪ್ರಿಲ್ 22:ಚುನಾವಣಾ ಪ್ರಚಾರ ಸಭೆಯಲ್ಲಿ ಬ್ರಾಹ್ಮಣ ಸಮಾಜದ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಅರಣ್ಯ ಸಚಿವ ಸತೀಶ್ ಜಾರಕಿ ಹೊಳಿ ವಿರುದ್ಧ ಮೈಸೂರಿನ ಜಿಲ್ಲಾ ಬ್ರಾಹ್ಮಣ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಇದೇ ವೇಳೆ ಸಚಿವರು ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತನಾಡಿ, ಏ .10 ರಂದು ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಸತೀಶ್ ಜಾರಕೀಹೊಳಿ ದೇಶದ ಸೇನೆಯಲ್ಲಿ ದಲಿತರು, ಹಿಂದುಳಿದವರು, ಮುಸ್ಲಿಮರು ಹೆಚ್ಚಾಗಿ ಪ್ರಾಣತ್ಯಾಗ ಮಾಡಿದ್ದಾರೆಯೇ ಹೊರರು ದೇಶಪಾಂಡೆ , ಕುಲಕರ್ಣಿ , ಜೋಷಿ ಸೇರಿದಂತೆ ಬ್ರಾಹ್ಮಣರು ಸೇನೆಗಾಗಿ ಜೀವ ಬಿಟ್ಟ ಇತಿಹಾಸವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ರೀತಿ ಒಂದು ಸಮಾಜದ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುವುದು ಚುನಾವಣೆ ಆಯೋಗ ವಿಧಿಸಿರುವ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು.

ಯಾವುದೇ ಜಾತಿಯ ವಿರುದ್ಧ ಜನಪ್ರತಿನಿಧಿಗಳು ಮಾತನಾಡುವುದು ಸರಿಯಲ್ಲ. ಸಚಿವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.












Click it and Unblock the Notifications