ಈ ಬಾರಿ ನಾಡಹಬ್ಬ ದಸರಾ ಸರಳವಾಗಿ ಆಚರಣೆ: ಸಿಎಂ ಯಡಿಯೂರಪ್ಪ
ಮೈಸೂರು, ಆಗಸ್ಟ್ 21: ಕೊರೊನಾ ವೈರಸ್ ಹಿನ್ನೆಲೆ ಈ ವರ್ಷ ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಇರುವ ಕಾರಣದಿಂದ ಈ ಬಾರಿ ಸರಳ ದಸರಾ ಆಚರಣೆಗೆ ಚಿಂತನೆ ನಡೆಸಿದ್ದು, ಇದನ್ನು ಯಾವ ರೀತಿ ಮಾಡಬೇಕೆಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಈ ಸಂಬಂಧ ಶೀಘ್ರವೇ ದಸರಾ ಉನ್ನತ ಮಟ್ಟದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮೃತ ವೈದ್ಯನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ
ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಸಂಬಂಧಿಸದಂತೆ ಪ್ರತಿಕ್ರಿಯಿಸಿದ ಅವರು, ಘಟನೆ ಕುರಿತು ಸೂಕ್ತ ತನಿಖೆ ನಡೆಸಲು ಆದೇಶಿಸಲಾಗಿದೆ. ಜತೆಗೆ ಇದನ್ನು ವಿಶೇಷ ಪ್ರಕರಣ ಎಂದು ಭಾವಿಸಿ, 50 ಲಕ್ಷ ರೂ. ಪರಿಹಾರ ನೀಡುವ ಜತೆಗೆ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವ ತೀರ್ಮಾನ ಮಾಡಲಾಗಿದ್ದು, ಆದರೆ ಪ್ರಕರಣದ ಸತ್ಯಾಂಶದ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಕಬಿನಿಯಲ್ಲಿ ಸತತ 5ನೇ ಬಾರಿಗೆ ಬಾಗಿನ ಅರ್ಪಿಸಿದ್ದೇನೆ. ಅಂತರ್ಜಲ ಕುಸಿಯುವುದು ತಪ್ಪಿದ್ದು, ಎಲ್ಲಾ ಕಡೆಗಳಲ್ಲಿ ಉತ್ತಮ ಬೆಳೆ ದೊರೆಯುವ ನಿರೀಕ್ಷೆಯಲ್ಲಿದ್ದೇವೆ. ಪ್ರತಿ ವರ್ಷ ಇದೇ ರೀತಿಯಾಗಿ ಉತ್ತಮ ಮಳೆಯಾಗಿ ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಆಶಿಸಿದರು.