ಮೈಸೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ; ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿಗೆ ಚಾಲನೆ
ಮೈಸೂರು, ಅಕ್ಟೋಬರ್ 15: ವಿಶ್ವವಿಖ್ಯಾತ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀಗಳ ಆಶೀರ್ವಾದ ಪಡೆದರು. ಇದೇ ವೇಳೆ ಮಠದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ, ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಈ ವೇಳೆ ಸುತ್ತೂರು ಮಠದಲ್ಲಿ ಸಿಎಂಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದರು. ಅಲ್ಲದೇ ನಾಡಿನಲ್ಲಿ ಮಳೆ, ಬೆಳೆ ಚೆನ್ನಾಗಿ ಆಗಲಿ, ನಾಡನ್ನು ಸುಭೀಕ್ಷವಾಗಿ ಇಡುವಂತೆ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ," ಎಂದರು.

ಇನ್ನು ದಸರಾ ಆಚರಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, "ದಸರಾ ದೀಪಾಲಂಕಾರ ವಿಸ್ತರಣೆಗೆ ಬೇಡಿಕೆ ಹೆಚ್ಚಾಗಿದೆ. ನಾಡಿನ ಮೂಲೆ ಮೂಲೆಗಳಿಂದ ಹೆಚ್ಚು ಜನ ಬಂದು ದೀಪಾಲಂಕಾರ ವೀಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂಬತ್ತು ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡುವುದಾಗಿ," ಘೋಷಣೆ ಮಾಡಿದರು.
ಅಲ್ಲದೇ, ಸಾಧ್ಯವಾದರೆ ಇಂದು ರಾತ್ರಿ ದೀಪಾಲಂಕಾರ ವೀಕ್ಷಿಸುವುದಾಗಿಯೂ ತಿಳಿಸಿದ ಅವರು, ಕುಟುಂಬ ಸಮೇತ ಅಂಬಾರಿ ಬಸ್ಸಿನಲ್ಲಿ ದಸರಾ ದೀಪಾಲಂಕಾರ ವೀಕ್ಷಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.
ಜಂಬೂಸವಾರಿಗೆ ಸಿದ್ಧವಾದ ಗಜಪಡೆ
ಇನ್ನು ಜಂಬೂಸವಾರಿ ಮೆರವಣಿಗೆ ಹಿನ್ನೆಲೆಯಲ್ಲಿ ಮಧ್ಯಾಹ್ನ 2:30ಕ್ಕೆ ಚಿನ್ನದ ಅಂಬಾರಿ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಸತತ ಎರಡನೇ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲು ಕ್ಯಾಪ್ಟನ್ ಅಭಿಮನ್ಯು ಸಜ್ಜಾಗಿದ್ದು, ಈತನಿಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ಚೈತ್ರಾ ಸಾಥ್ ನೀಡಲಿವೆ. ಉಳಿದಂತೆ ನಿಶಾನೆ ಆನೆಯಾಗಿ ಧನಂಜಯ್, ನೌಪತ್ ಆನೆಯಾಗಿ ಗೋಪಾಲಸ್ವಾಮಿ, ಸಾಲಾನೆಗಳಾಗಿ ಅಶ್ವತ್ಥಾಮ ಭಾಗಿಯಾಗಲಿವೆ.

ಹುಣಸೂರು ಮೂಲದ ಕಲಾವಿದರಾದ ನಾಗಲಿಂಗಪ್ಪ ಬಡಿಗೇರಿ, ಅಣ್ಣ ನಾರಾಯಣ ಬಡಿಗೇರಿ, ತಮ್ಮ ಅರುಣ್ ಬಡಿಗೇರಿ, ಸ್ನೇಹಿತರಾದ ಮಧು, ರವಿ 2004ರಿಂದ ನಿರಂತರವಾಗಿ ಗಜಪಡೆಯ ದೇಹದ ಮೇಲೆ ಸಾಂಪ್ರದಾಯಿಕ ಚಿತ್ರಕಲೆಯನ್ನು ಬಿಡಿಸಿದ್ದಾರೆ.
ಆನೆಗಳ ದೇಹದ ಗಾತ್ರಕ್ಕೆ ಅನುಗುಣವಾಗಿ ಚಿತ್ರ ಬಿಡಿಸಲಾಗುತ್ತದೆ. ಮುಖದ ಮಧ್ಯದಲ್ಲಿ ಗಂಡಭೇರುಂಡ, ಹಣೆಯ ಭಾಗಕ್ಕೆ ನಾಮ, ಕಿವಿಗೆ ಶಂಖ ಮತ್ತು ಚಕ್ರ, ಸೊಂಡಿಲಿಗೆ ಹೂ ಬಳ್ಳಿ, ಹಾರುವ ಪಕ್ಷಿ, ದಂತದ ಮೇಲ್ಭಾಗ, ನಾಲ್ಕು ಕಾಲುಗಳು ಮತ್ತು ಬಾಲ ಸೇರಿದಂತೆ ಅವುಗಳ ಅಕ್ಕಪಕ್ಕದಲ್ಲಿ ವಿವಿಧ ಚಿತ್ತಾರಗಳನ್ನು ಬಿಡಿಸಲಾಗಿದೆ.
ಇದಕ್ಕಾಗಿ ಬೊಂಬಿನಿಂದ ಮಾಡಿದ ವಿಶೇಷ ಬ್ರಷ್ ಬಳಸಿದ್ದು, ಆನೆಗಳಿಗೆ ಸ್ನಾನ ಮಾಡಿಸಿದ ಬಳಿಕ ಸಂಪೂರ್ಣವಾಗಿ ದೇಹ ಒಣಗಲು ಬಿಟ್ಟು, ಆ ನಂತರ ಮೈಮೇಲಿನ ಬಿಳಿ ಚುಕ್ಕಿಗಳನ್ನು ಕಪ್ಪು ಬಣದಿಂದ ಮುಚ್ಚಲಾಗುತ್ತದೆ. ಆ ಚುಕ್ಕಿಗಳು ಸೊಂಡಿಲು ಮತ್ತು ಕಿವಿ ಭಾಗದಲ್ಲಿ ಹೆಚ್ಚಾಗಿರುತ್ತವೆ. ಪ್ರತಿ ಆನೆಯ ಗಾತ್ರಕ್ಕೆ ತಕ್ಕಂತೆ ಚಿತ್ರಗಳು ಹಾಗೂ ಬಣ್ಣಗಳನ್ನು ಬಳಸಲಾಗುತ್ತದೆ.












Click it and Unblock the Notifications