Mysuru dasara 2022; ದಸರಾಗೆ ಸಿದ್ಧತೆ ಹೇಗಿದೆ?, ಇಲ್ಲಿದೆ ಮಾಹಿತಿ
ಮೈಸೂರು, ಸೆಪ್ಟೆಂಬರ್, 25: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನು ಕೇವಲ ಒಂದು ದಿನ ಬಾಕಿ ಇದೆ ಅಷ್ಟೆ. ದಸರಾ ಉತ್ಸವಕ್ಕೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಸೋಮವಾರ ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸೋಮವಾರ ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶಿಕ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಮೂಲಕ ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ನಂತರ ನಾಡಿನ ಜನತೆಗೆ ದಸರಾ ಶುಭಾಶಯ ಹಾಗೂ ಸಂದೇಶವನ್ನು ತಿಳಿಸಲಿದ್ದಾರೆ.
ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಕಾರಣ ಭದ್ರತೆಗೆ ಆದ್ಯತೆ ನೀಡಲಾಗಿದೆ. ವೇದಿಕೆಯಲ್ಲಿ ಒಟ್ಟು 13 ಆಸನಗಳಿರಲಿವೆ. ರಾಷ್ಟ್ರಪತಿ, ರಾಜ್ಯಪಾಲರು, ಮುಖ್ಯಮಂತ್ರಿಗಳು, ಆರು ಜನ ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ.

ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಸಚಿವರು
ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿಯವರ ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

ನರದೆಲ್ಲೆಡೆ ಡ್ರೋಣ್ ಕ್ಯಾಮೆರಾ ಕಣ್ಗಾವಲು
ಐದು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ, 13 ಸಾವಿರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ಬಳಕೆ, ಎಲ್ಲೆಡೆ ಡ್ರೋಣ್ ಕ್ಯಾಮೆರಾ ಕಣ್ಗಾವಲು, ಎತ್ತರದ ಸ್ಥಳದಲ್ಲಿ ಪೊಲೀಸರ ಗಸ್ತು ತಿರುಗಲಿದ್ದಾರೆ. ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಈ ಬಗ್ಗೆ ಮಾತನಾಡಿ, ದಸರಾ ಮಹೋತ್ಸವದ ಪ್ರಯುಕ್ತ 5,485 ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಇಡೀ ನಗರದ ಮೇಲೆ ಹದ್ದಿನ ಕಣ್ಣಿಡಲು 13,140 ಖಾಸಗಿ ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಇದರೊಂದಿಗೆ ಈಗಾಗಲೇ ಇರುವ ಸಿಸಿಟಿವಿ ಕ್ಯಾಮೆರಾಗಳೊಂದಿಗೆ 110 ಸಿಸಿಟಿವಿ ಕ್ಯಾಮೆರಾಗಳನ್ನು ಹೆಚ್ಚುವರಿಯಾಗಿ ಆಯ್ದ ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಡ್ರೋಣ್ ಕ್ಯಾಮೆರಾದ ಮೂಲಕ ಇಡೀ ನಗರದ ಮೇಲೆ ಕಣ್ಗಾವಲು ಇಡಲಾಗುವುದು ಎಂದು ಮಾಹಿತಿ ನೀಡಿದರು.

ವಾಹನ ಸಂಚಾರ ನಿರ್ಬಂಧದ ಬಗ್ಗೆ ಚರ್ಚೆ
ದಸರಾ ಮಹೋತ್ಸವದ ಪ್ರಯುಕ್ತ ನಗರದೆಲ್ಲೆಡೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ವಾಹನಗಳಲ್ಲಿ ಕಿಕ್ಕಿರಿದು ಬರುವುದರಿಂದ, ನಗರದ ಹೃದಯ ಭಾಗದಲ್ಲಿ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಕ್ಕೆ ಚಿಂತನೆ ನಡೆಸಲಾಗುತ್ತಿದೆ. ಇದರ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಸೆ.26ರಿಂದ ಅ.5ರವರೆಗೆ ಕಾರ್ಯನಿರ್ವಹಣೆ
ಪ್ರವಾಸಿಗರಿಗೆ ದಸರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ನಗರದ ಎಂಟು ಕಡೆ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಬೆಳಗ್ಗೆ 9ರಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಇನ್ನು ರೈಲ್ವೇ ನಿಲ್ದಾಣ, ಅರಮನೆಯ ವರಾಹ ಗೇಟ್, ಕೆ. ಆರ್. ವೃತ್ತ, ಸೇಂಟ್ ಫಿಲೋಮಿನಾ ವೃತ್ತ, ಗ್ರಾಮಾಂತರ ಬಸ್ ನಿಲ್ದಾಣ, ಗಾಂಧಿ ಚೌಕ, ಮೃಗಾಲಯ, ದಸರಾವಸ್ತು ಪ್ರದರ್ಶನ ಆವರಣದಲ್ಲಿ ಸಹಾಯ ಕೇಂದ್ರಗಳು ಇರಲಿವೆ ಎಂದು ಮಾಹಿತಿಯನ್ನು ನೀಡಿದ್ದಾರೆ.












Click it and Unblock the Notifications