Mysuru dasara 2024: ದಸರಾ ಆನೆಗಳ ಪಟ್ಟಿ ಬಿಡುಗಡೆ, ಗಜಪಡೆಗೆ ಸಾರಥಿ ಯಾರು?
ಮೈಸೂರು, ಆಗಸ್ಟ್ 13: ಮೈಸೂರು ದಸರಾ - 2024ರ ವೇಳಾಪಟ್ಟಿ ಘೋಷಣೆಯಾಗಿದೆ. ಅಕ್ಟೋಬರ್ 3ರಂದು ದಸರಾ ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 12ರಂದು ಐತಿಹಾಸಿಕ ಜಂಬೂ ಸವಾರಿ ನಡೆಯಲಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಅದ್ಧೂರಿಯಾಗಿ ಈ ಬಾರಿಯ ದಸರಾ ಆಚರಣೆ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಸೋಮವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ 2024ರ ಮೈಸೂರು ದಸರಾ ಜಂಬೂ ಸವಾರಿ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಚಿನ್ನದ ಅಂಬಾರಿಯನ್ನು 'ಅಭಿಮನ್ಯು' ಹೊರಲಿದ್ದು, ಗಜಪಡೆಯ ಸಾರಥಿಯಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾನೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ-2024ರ ಉನ್ನತ ಮಟ್ಟದ ಸಭೆ ನಡೆಯಿತು. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಆಗಸ್ಟ್ 21 ರಂದು ಬೆಳಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಪೂಜೆ ಮಾಡಲಾಗುತ್ತದೆ. ಅಕ್ಟೋಬರ್ 3 ರಿಂದ 12ರ ವರೆಗೆ 2024ನೇ ಸಾಲಿನ ದಸರಾ ಮಹೋತ್ಸವ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ನಡೆಯಲಿದೆ. ಅಕ್ಟೋಬರ್ 12ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ನಂದಿ ಧ್ವಜ ಪೂಜೆ ನಡೆಯಲಿದ್ದು, ಬಳಿಕ ದಸರಾ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ದಸರಾವನ್ನು ಯಾರು ಉದ್ಘಾಟನೆ ಮಾಡಲಿದ್ದಾರೆ? ಎಂದು ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ.
ದಸರಾ ಆನೆಗಳ ಪಟ್ಟಿ: ಮೈಸೂರು ದಸರಾ 2024ರಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು 'ಅಭಿಮನ್ಯು' ಹೊರಲಿದ್ದು, ದಸರಾ ಗಜಪಡೆಯ ಕ್ಯಾಪ್ಟನ್ ಆಗಲಿದ್ದಾನೆ.
ಮಹೇಂದ್ರ, ಗೋಪಿ, ಭೀಮ, ಪ್ರಶಾಂತ, ಧನಂಜಯ, ಸುಗ್ರೀವ, ಹಿರಣ್ಯ, ರೋಹಿತ, ಏಕಲವ್ಯ ಕಂಜನ್, ಲಕ್ಷ್ಮೀ, ವರಲಕ್ಷ್ಮೀ ಮತ್ತು ದೊಡ್ಡ ಹರವೇ, ಲಕ್ಷ್ಮೀ ಆನೆಗಳು ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳಲಿವೆ. ಮೊದಲ ತಂಡದಲ್ಲಿ 9 ಆನೆಗಳು ಹಾಗೂ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರು ನಗರಕ್ಕೆ ಬಂದು ತಲುಪಲಿವೆ.
ನೆನಪಾದ ಅರ್ಜುನ: ಮೈಸೂರು ದಸರಾ ಮತ್ತು ಜಂಬೂ ಸವಾರಿ ಎಂದ ತಕ್ಷಣ ನೆನಪಾಗುವುದು 'ಅರ್ಜುನ' ಆನೆ. ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ 'ಅರ್ಜುನ' ಆನೆಯು ಕಳೆದ ವರ್ಷದ ಡಿಸೆಂಬರ್ 4 ರಂದು ಹಾಸನದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾವನ್ನಪ್ಪಿತ್ತು. ಆನೆ ಸಾವನ್ನಪ್ಪಿದ ಜಾಗದಲ್ಲಿ ಸ್ಮಾರಕ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದೆ.
2023ರಲ್ಲಿ ಬರ ಪರಿಸ್ಥಿತಿ ಕಾರಣ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು. ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15ಕ್ಕೆ ದಸರಾ ಮಹೋತ್ಸವ-2024ಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದೆ. ಎಲ್ಲಾ ಮಳಿಗೆಗಳನ್ನು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ನಿರ್ದೇಶಿಸಲಾಗಿದೆ.












Click it and Unblock the Notifications