ಇಂದಿನಿಂದ ಮೈಸೂರು ದಸರಾ; ಯಾವ್ಯಾವ ಕಾರ್ಯಕ್ರಮಗಳಿಗೆ ಚಾಲನೆ?
Recommended Video
ಮೈಸೂರು, ಸೆಪ್ಟೆಂಬರ್ 29: ನಾಡಹಬ್ಬ ಮೈಸೂರು ದಸರಾಗೆ ಇಂದು (ಸೆ.29) ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯೊಂದಿಗೆ ಖ್ಯಾತ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರು ವಿದ್ಯುಕ್ತ ಚಾಲನೆ ನೀಡುತ್ತಿದ್ದಂತೆಯೇ ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್ ಸೇರಿದಂತೆ ಹತ್ತು ಹಲವು ದಸರಾ ಕಾರ್ಯಕ್ರಮಗಳಿಗೆ ಅದ್ಧೂರಿ ಚಾಲನೆ ಸಿಗಲಿದೆ.
ದಸರಾ ಆರಂಭದ ದಿನವಾದ ಇಂದು ಏನೆಲ್ಲ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ ಎಂಬುದರ ಬಗ್ಗೆ ಪಕ್ಷಿ ನೋಟ ಇಲ್ಲಿದೆ. ಬೆಳಿಗ್ಗೆ 9-39ರಿಂದ 10-25 ರೊಳಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದಸರಾ ಮಹೋತ್ಸವಕ್ಕೆ ಖ್ಯಾತ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರು ಚಾಲನೆ ನೀಡಲಿದ್ದಾರೆ. ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿ ಬೆಟ್ಟದಲ್ಲಿ ಪೊಲೀಸ್ ಸಹಾಯ ಕೇಂದ್ರ (ಕಿಯಾಸ್ಕ್) ಕಾರ್ಯಕ್ರಮವನ್ನು ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟದಲ್ಲಿ ದಸರಾ ಕ್ರೀಡಾಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಮೈಸೂರು ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಮಧ್ಯಾಹ್ನ 12-30ಕ್ಕೆ ಕೆ.ಆರ್.ಎಸ್ ಹಿನ್ನೀರಿನ ಹೊಸಹುಂಡವಾಡಿಯಲ್ಲಿ ಸಾಹಸ ಕ್ರೀಡೋತ್ಸವ ಕಾರ್ಯಕ್ರಮವನ್ನು ಶಾಸಕ ಜಿ.ಟಿ ದೇವೇಗೌಡ ಅವರು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 2ಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಆಹಾರ ಮೇಳ ಉದ್ಘಾಟಿಸಲಿದ್ದಾರೆ. 3.30ಕ್ಕೆ ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಸರಾ ಕುಸ್ತಿ ಪಂದ್ಯಾವಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆ ನಂತರ ಸಂಜೆ 4 ಗಂಟೆಗೆ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಸಂಜೆ 4.30 ಗಂಟೆಗೆ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ, 4.45ಕ್ಕೆ ಸದೃಢ ಭಾರತ ಮಕ್ಕಳ ಕ್ರೀಡಾರಂಗವನ್ನು ಕುಪ್ಪಣ್ಣ ಪಾರ್ಕ್ ನಲ್ಲಿ ಸಂಸದ ಪ್ರತಾಪ್ ಸಿಂಹ ಉದ್ಘಾಟಿಸುವರು. ಸಂಜೆ 5ಕ್ಕೆ ಕಾಡಾ ಕಚೇರಿ ಮೈದಾನದಲ್ಲಿ ಪುಸ್ತಕ ಮಳಿಗೆಯನ್ನು ಪ್ರವಾಸೋದ್ಯಮ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸಿ.ಟಿ. ರವಿ ಅವರು ಉದ್ಘಾಟಿಸುವರು.
ಸಂಜೆ 6.15ಕ್ಕೆ ಸಯ್ಯಾಜಿರಾವ್ ರಸ್ತೆಯಲ್ಲಿನ ಹಸಿರು ಮಂಟಪದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಚಾಲನೆ ನೀಡಲಿದ್ದಾರೆ.












Click it and Unblock the Notifications