ಮೈಸೂರು ದಸರಾದಲ್ಲಿ ಬೊಂಬೆಗಳ ದಿಬ್ಬಣ...!
ಮೈಸೂರು, ಅಕ್ಟೋಬರ್ 18: ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗಿದ್ದು, ನವರಾತ್ರಿಯ ಸಡಗರ ಆರಂಭವಾಗಿದೆ. ಇನ್ನೊಂದೆಡೆ ಇಲ್ಲಿನ ಮನೆ ಮನೆಗಳಲ್ಲಿ ಬೊಂಬೆಗಳ ದಿಬ್ಬಣವೂ ಹೊರಟಿದೆ.
ಸಾಮಾನ್ಯವಾಗಿ ಬೊಂಬೆ ಪ್ರದರ್ಶನ ಎಲ್ಲೆಡೆ ನಡೆಯುತ್ತದೆಯಾದರೂ ಮೈಸೂರು ದಸರಾದಲ್ಲಿ ಅದಕ್ಕೊಂದು ಗೌರವದ ಸ್ಥಾನ ನೀಡಿದವರು ಮೈಸೂರನ್ನು ಆಳಿದ ರಾಜ ಒಡೆಯರ್. ಅವರು 1610 ರಲ್ಲಿ ದಸರಾ ಆರಂಭಿಸಿದ್ದು, ಆ ನಂತರ ಅರಮನೆಯಲ್ಲಿ ಬೊಂಬೆ ಪ್ರದರ್ಶನ ಮಾಡುವ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಅದು ಇವತ್ತಿಗೂ ಮುಂದುವರೆಯುತ್ತಾ ಬಂದಿದೆ.

ನವರಾತ್ರಿಯಲ್ಲಿ ಬೊಂಬೆಗಳಿಗೆ ಆರತಿ
ನವರಾತ್ರಿ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮನೆಗಳಲ್ಲಿ ವಿವಿಧ ಬಣ್ಣದ, ನಮೂನೆಯ ಗೊಂಬೆಗಳನ್ನಿಟ್ಟು ಆರತಿ ಬೆಳಗುವ ಮೂಲಕ ಪೂಜೆ ಸಲ್ಲಿಸಲಾಗುತ್ತದೆ. ಇದು ಪಾಡ್ಯದಿಂದ ಆರಂಭವಾಗಿ ಬಿದಿಗೆ, ತದಿಗೆ, ಚೌತಿ, ಪಂಚಮಿ, ಷಷ್ಠಿ, ಸಪ್ತಮಿ, ಅಷ್ಠಮಿ, ನವಮಿ ತನಕ ಒಂಬತ್ತು ದಿನಗಳ ಕಾಲ ನಡೆಯುತ್ತದೆ. ಇತರೆ ದಿನಗಳಲ್ಲಿ ಮನೆಯ ಶೋಕೇಶ್ ನಲ್ಲಿರುವ ಗೊಂಬೆಗಳು ನವರಾತ್ರಿ ಬರುತ್ತಿದ್ದಂತೆಯೇ ದೇವರ ಕೋಣೆಯಲ್ಲಿ ಪೂಜ್ಯ ಸ್ಥಾನ ಪಡೆಯುತ್ತವೆ. ಕೆಲವರು ಮಣ್ಣು, ಗಾಜು, ಉಲ್ಲಾನ್, ಪ್ಲಾಸ್ಟಿಕ್, ಪಿಂಗಾಣಿ, ಇನ್ನಿತರೆ ವಸ್ತುಗಳಿಂದ ತಯಾರಿಸಿದ ಗೊಂಬೆಗಳನ್ನು ಮನೆಯಲ್ಲಿ ಕೂರಿಸಿದರೆ ಮತ್ತೆ ಕೆಲವರು ಮಣ್ಣಿನಿಂದಲೇ ಮಾಡಿದ ಗೊಂಬೆಗಳನ್ನು ಕೂರಿಸುತ್ತಾರೆ.

ಬೊಂಬೆ ಪ್ರದರ್ಶನಕ್ಕಿದೆ ಇತಿಹಾಸ
ಈ ಗೊಂಬೆಗಳು ಸಾಮಾನ್ಯವಾಗಿ ಪುರಾಣದ ಕಥೆಗಳನ್ನು, ನಾಡಿನ ಪರಂಪರೆಯನ್ನು ಸಾರುತ್ತಿರುತ್ತವೆ. ಈಶ್ವರ, ಗಣಪತಿ, ಲಕ್ಷ್ಮಿ, ಸರಸ್ವತಿ, ದುರ್ಗಿ ಮೊದಲಾದ ದೇವರ ಮೂರ್ತಿಗಳನ್ನೂ, ದುಷ್ಟ ಸಂಹಾರಕ್ಕೆ ಸಂಬಂಧಿಸಿದ ಕಥಾ ಹಿನ್ನಲೆಗಳನ್ನು ಹೊಂದಿರುವ ಗೊಂಬೆಗಳನ್ನು ಇಲ್ಲಿ ಪ್ರತಿಷ್ಠಾಪಿಸುವುದು ಕೂಡ ಒಂದು ಕಲೆಯೇ. ಇನ್ನು ಇತಿಹಾಸದ ಪುಟಗಳನ್ನು ತೆರೆದು ನೋಡಿದರೆ, ಹಿಂದಿನ ಕಾಲದಲ್ಲಿ ಮಕ್ಕಳಿಗೆ ಈಗಿನ ಕಾಲದಂತೆ ಮನೋರಂಜನೆಗೆ ಯಾವುದೇ ಆಧುನಿಕ ಆಟಿಕೆಗಳಿರಲಿಲ್ಲ. ಹಾಗಾಗಿ ಮಕ್ಕಳು ಬಾಲ್ಯದಿಂದಲೇ ಗೊಂಬೆಗಳೊಂದಿಗೆ ಆಡುತ್ತಾ ಬೆಳೆಯುತ್ತಿದ್ದರು. ಅಲ್ಲದೆ, ಬಾಲ್ಯವಿವಾಹವೂ ನಡೆಯುತ್ತಿದ್ದ ಕಾಲವಾದುದರಿಂದ ಹೆತ್ತವರು ಮಗಳನ್ನು ಮದುವೆ ಮಾಡಿಕೊಡುವಾಗ ಆಟವಾಡುತ್ತಿದ್ದ ಗೊಂಬೆಗಳನ್ನು ಸಹ ಜೊತೆಯಲ್ಲಿಯೇ ನೀಡುತ್ತಿದ್ದರು. ಅಲ್ಲದೆ ವರ್ಷಕ್ಕೊಮ್ಮೆ ಈ ಗೊಂಬೆಗಳನ್ನು ಒಂದೆಡೆ ಪ್ರತಿಷ್ಠಾಪಿಸಿ ಅದಕ್ಕೆ ಆರತಿ ಬೆಳಗಿ ಪೂಜಿಸುವಂತೆ ಹೇಳುತ್ತಿದ್ದರೆಂದೂ ಅದರಂತೆ ಈ ಗೊಂಬೆ ಹಬ್ಬ ರೂಢಿಗೆ ಬಂದಿರಬಹುದೆಂದು ಅಭಿಪ್ರಾಯಪಡಲಾಗಿದೆ.

ಬೊಂಬೆ ಪ್ರದರ್ಶನಕ್ಕೆ ವಿಶೇಷ ಸ್ಥಾನ
ನವರಾತ್ರಿಯಲ್ಲಿ ಬೊಂಬೆ ಪ್ರದರ್ಶನ ಮಾಡುವುದು ಎಲ್ಲೆಡೆ ನಡೆದುಕೊಂಡು ಬರುತ್ತಿತ್ತಾದರೂ ಮೈಸೂರಿನಲ್ಲಿ ಅದಕ್ಕೊಂದು ಸ್ಥಾನಮಾನ ನೀಡಿದ್ದು ಮೈಸೂರು ಮಹಾರಾಜರಾಗಿದ್ದ ರಾಜ ಒಡೆಯರು. ಅವರು ತಮ್ಮ ಆರಾಧನೆಯಲ್ಲಿ ಗೊಂಬೆಗೂ ಒಂದು ಮಹತ್ವದ ಸ್ಥಾನ ನೀಡಿ ನಾಡಹಬ್ಬ ನವರಾತ್ರಿಯಲ್ಲಿ ದಸರಾ ಮೆರವಣಿಗೆಯಂತೆಯೇ ಬೊಂಬೆಗೂ ವಿಶೇಷ ಸ್ಥಾನ ಕಲ್ಪಿಸಿದರು. ನವರಾತ್ರಿಯ ಒಂಬತ್ತು ದಿನವೂ ಅರಮನೆಯಲ್ಲಿ ವಿವಿಧ ಬೊಂಬೆಗಳನ್ನು ಸಾಲಾಂಕೃತವಾಗಿ ಜೋಡಿಸಿ, ಪೂಜಿಸಿ ಪ್ರದರ್ಶಿಸುವುದು ಅವರ ಆಡಳಿತಾವಧಿಯಿಂದ ಮುಂದುವರೆದು ಬಂತೆಂದು ಹೇಳಲಾಗಿದೆ.

ಅರಮನೆಯಲ್ಲಿದೆ ಬೊಂಬೆಗಳ ತೊಟ್ಟಿಮನೆ
ರಾಜರ ಕಾಲದಲ್ಲಿ ಅರಮನೆಯಲ್ಲಿ ದರ್ಬಾರ್ ಹಾಲ್, ಚಿತ್ರಶಾಲೆ, ವಿವಾಹ ಮಂಟಪ, ಭೋಜನ ಶಾಲೆ, ಶಸ್ತ್ರಗಾರವಿರುವಂತೆ ಬೊಂಬೆಗಳ ಪ್ರದರ್ಶನಕ್ಕೂ ಒಂದು ಪ್ರತ್ಯೇಕ ಸ್ಥಳವನ್ನು ಮೀಸಲಿರಿಸಿದರು. ಅದೇ 'ತೊಟ್ಟಿಮನೆ'. ಈ ತೊಟ್ಟಿಮನೆಯಲ್ಲಿ ಗತಕಾಲದ ಕಲಾತ್ಮಕತೆಯನ್ನು ಸಾರುವ ದಂತ, ಶ್ರೀಗಂಧದ ಮರ ಸೇರಿದಂತೆ ಬೆಲೆಬಾಳುವ ಮರಗಳಿಂದ ಕೆತ್ತಿದ ಅಪೂರ್ವ ಬೊಂಬೆಗಳನ್ನು ಕಾಣಬಹುದು. ಕಲಾಪೋಷಕರಾಗಿದ್ದ ರಾಜಒಡೆಯರು ಕಲಾತ್ಮಕ ಬೊಂಬೆಗಳ ಕೆತ್ತನೆಯನ್ನೇ ತಮ್ಮ ಬದುಕಾಗಿಸಿಕೊಂಡ ಕಲಾವಿದರಿಗೆ ಪ್ರೋತ್ಸಾಹ ನೀಡುವ ಮೂಲಕ ಬದುಕಲು ಅವಕಾಶ ಮಾಡಿಕೊಟ್ಟರು. ಇವರ ಪ್ರೋತ್ಸಾಹದಿಂದ ಹಲವು ಕಲಾಕಾರರು ಬೆಳಕಿಗೆ ಬಂದರು ಎಂಬುವುದರಲ್ಲಿ ಎರಡು ಮಾತಿಲ್ಲ.

ರಾಜ-ರಾಣಿಯರಿಗೆ ಮೊದಲ ಸ್ಥಾನ
ಹೀಗಾಗಿಯೇ ಮೈಸೂರು ರಾಜ ಒಡೆಯರ ಪ್ರತೀಕವೆಂಬಂತೆ ಅವರಿಗೆ ಗೌರವ ಸೂಚಕವಾಗಿ ಪ್ರತಿ ಮನೆಮನೆಯ ಬೊಂಬೆಗಳ ಸಾಲಿನಲ್ಲಿ ರಾಜರಾಣಿ ಬೊಂಬೆ ಮೇಲ್ಪಂಕ್ತಿಯಲ್ಲಿ ಸ್ಥಾನಪಡೆದಿರುತ್ತವೆ. ಈ ಬೊಂಬೆಗಳನ್ನು ಪಟ್ಟದ ಬೊಂಬೆಗಳೆಂದು ಕರೆಯಲಾಗುತ್ತದೆ. ಉಳಿದಂತೆ ಅಂಬಾರಿ ಹೊತ್ತ ಆನೆ, ಪದಾತಿದಳ, ಕುದುರೆ, ಒಂಟೆಗಳ ಸಾಲು, ಮೈಸೂರು ಅರಮನೆ ಸೇರಿದಂತೆ ಹಲವು ಬೊಂಬೆಗಳು ಪ್ರದರ್ಶನದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿರುವುದನ್ನು ನಾವು ಕಾಣಬಹುದಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications