ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬದ ಸಂಭ್ರಮ ಹೆಚ್ಚಿಸಲಿ
ಮೈಸೂರು, ಆಗಸ್ಟ್ 17: ಪರಿಸರ ಮಾಲಿನ್ಯವನ್ನು ಹತೋಟಿಯಲ್ಲಿಡುವ ದೃಷ್ಟಿಯಿಂದ ಪರಿಸರ ಸ್ನೇಹಿ ಗೌರಿ-ಗಣೇಶನನ್ನು ಪೂಜಿಸಲು ಜಿಲ್ಲಾಧಿಕಾರಿ ಡಿ.ರಂದೀಪ್ ಆದೇಶ ಹೊರಡಿಸಿದ್ದು, ಗುರುವಾರ ಈ ಕುರಿತು ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.
ರಾಜ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ನಿರ್ಮಿಸಲಾದ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಡಿ.ರಂದೀಪ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, 'ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣದ ಗೌರಿ ಗಣೇಶ ವಿಗ್ರಹಗಳ ಬಳಕೆ ಬೇಡ ಈ ಕುರಿತು ಜನರಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಅವಡಿಸಲಾಗುವುದು. ಶಾಲೆಗಳಲ್ಲಿಯೂ ಈ ಕುರಿತು ಜಾಗೃತಿ ಮೂಡಿಸಲಾಗುವುದು.
ಪ್ಲಾಸ್ಟರ್ ಪ್ಯಾರಿಸ್ ಗಣಪನ ತಡೆಗೆ ವಿಶೇಷ ಪೊಲೀಸ್ ಚೆಕ್ ಪೋಸ್ಟ್ ನಿರ್ಮಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ಬಣ್ಣದ ಗೌರಿ ಗಣೇಶ ವಿಗ್ರಹಗಳು ಬಳಕೆಯಾಗಿರುವುದು ತಿಳಿದು ಬಂದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.