Chamundi Hills: ಚಾಮುಂಡಿ ಬೆಟ್ಟದಲ್ಲಿ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧ
ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಆಷಾಢ ಮಾಸದ ಪ್ರಯುಕ್ತ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಾಲಯದಲ್ಲಿ ಜುಲೈ 12, 19, 26 ಹಾಗೂ ವರ್ದಂತಿಯು 27 ರಂದು ಮತ್ತು ಆಗಸ್ಟ್ 2ರಂದು ಕಡೆಯ ಆಷಾಢ ಶುಕ್ರವಾರ ಈ ಐದು ದಿನಗಳು ಮಾತ್ರ ದೇವಾಲಯದ ವತಿಯಿಂದ ಕೆಎಸ್ಆರ್ ಟಿಸಿ ಬಸ್ಗಳಲ್ಲಿ ಉಚಿತವಾಗಿ ಚಾಮುಂಡಿಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದರು.

40 ಬಸ್ಗಳ ವ್ಯವಸ್ಥೆ
ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾರ್ವಜನಿಕ ವಾಹನಗಳನ್ನು ಚಾಮುಂಡಿಬೆಟ್ಟದ ಪ್ರವೇಶಕ್ಕೆ ನಿಷೇಧ ವಿಧಿಸಿದ್ದು, ಲಲಿತಾ ಮಹಲ್ ಪಾರ್ಕಿಂಗ್ನಲ್ಲಿಯೇ ಸಾರ್ವಜನಿಕರು ತಮ್ಮ ವಾಹನವನ್ನು ನಿಲ್ಲಿಸಿ, ಕೆ.ಎಸ್.ಆರ್.ಟಿ.ಸಿ. ವಾಹನಗಳ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಚಾಮುಂಡಿಬೆಟ್ಟಕ್ಕೆ ಆಗಮಿಸಬೇಕು. (ಶಕ್ತಿ ಯೋಜನೆ ಅನ್ವಯಿಸುತ್ತದೆ) ಹಾಗೂ ಚಾಮುಂಡಿಬೆಟ್ಟದ ಗ್ರಾಮಸ್ಥರು ಈ ಸಮಯದಲ್ಲಿ ಚಾಮುಂಡಿಬೆಟ್ಟ ಗ್ರಾಮದಲ್ಲಿ ವಿಳಾಸವಿರುವ ಆಧಾರ್ ಕಾರ್ಡ್ ಅನ್ನು ಹಾಜರುಪಡಿಸಿ/ ಪರಿಶೀಲನೆಗೆ ಒಳಪಡಿಸಿ ಪ್ರವೇಶವನ್ನು ಪಡೆಯಬಹುದು ಎಂದು ಹೇಳಿದರು.
ಯಾವುದೇ ಪಾಸ್ ಇಲ್ಲ
ಅಪಾಢ ಮಾಸದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಪ್ರವೇಶಕ್ಕೆ ಯಾವುದೇ ಪಾಸ್ ವ್ಯವಸ್ಥೆಯನ್ನು ಮಾಡಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆಯನ್ನು ಮಾಡಲಾಗಿರುವ 50 ಹಾಗೂ 300 ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶವನ್ನು ಪಡೆಯಬಹುದು ಎಂದು ತಿಳಿಸಿದರು.
ಭಕ್ತಾದಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಲಲಿತಾಮಹಲ್ ಪಾರ್ಕಿಂಗ್ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲಿಯೇ ಪ್ರವೇಶದ ಟಿಕೆಟ್ಗಳನ್ನು ವಿತರಿಸುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ತುರ್ತುಚಿಕಿತ್ಸೆ ವ್ಯವಸ್ಥೆ ಹಾಗೂ ತುರ್ತು ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸುವ ಸಾರ್ವಜನಿಕರು, ಕಡ್ಡಾಯವಾಗಿ ಪ್ರಸಾದ ವಿತರಿಸುವ ಮೊದಲು ಅಂಕಿತಾಧಿಕಾರಿಗಳು, ಆಹಾರ ನಿಯಂತ್ರಣ ಇಲಾಖೆಯವರಿಂದ ದೃಢೀಕರಣವನ್ನು ಪಡೆದು, ಜಿಲ್ಲಾಧಿಕಾರಿಗಳ ಕಚೇರಿಯ ಧಾರ್ಮಿಕ ದತ್ತಿ ಶಾಖೆಯಲ್ಲಿ ಅನುಮತಿಯ ಪತ್ರವನ್ನು ಪಡೆದು ತಮಗೆ ನಿಗದಿಪಡಿಸಿರುವ ಸಮಯದಲ್ಲಿ ಬಂದು ನಿಗದಿತ ಸ್ಥಳಗಳಲ್ಲಿ ಪ್ರಸಾದವನ್ನು ವಿತರಿಸುವುದು ಹಾಗೂ ಆ ಸ್ಥಳವನ್ನು ತಾವೆ ಸ್ವಚ್ಛಗೊಳಿಸಬೇಕು ಎಂದು ಮಾಹಿತಿ ನೀಡಿದರು.












Click it and Unblock the Notifications