'ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ವಿಶ್ವನಾಥ್ ಅವರಿಗಿಲ್ಲ'
ಮೈಸೂರು, ಜೂನ್ 6: ಸಚಿವ ಸ್ಥಾನದ ಆಕಾಂಕ್ಷಿಯಾದ ವಿಶ್ವನಾಥ್ ಅವರು ಪಕ್ಷದ ವರಿಷ್ಠರ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಾಟಕವಾಡುತ್ತಿದ್ದಾರೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ರಾಜೇಶ್, ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ವಿರುದ್ಧ ಅನಾವಶ್ಯಕ ಆರೋಪವನ್ನು ವಿಶ್ವನಾಥ್ ಮಾಡುತ್ತಿದ್ದಾರೆ. ಇದನ್ನು ಯಾರೂ ಸಹಿಸುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದರೂ ಮೈತ್ರಿ ಸರ್ಕಾರ ಪಾಲನೆ ಮಾಡಿಲ್ಲ. ಈ ಕಾರಣಕ್ಕಾಗಿಯೇ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಸೋತಿದ್ದಾರೆ ಎಂದು ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ಕಾಂಗ್ರೆಸ್ ಕಾರಣವೆಂಬುದನ್ನು ಅಲ್ಲಗಳೆದ ಅವರು, ರಾಜ್ಯಾಧ್ಯಕ್ಷರಾಗಿರುವ ಅವರೇ ಮೈತ್ರಿ ಅಭ್ಯರ್ಥಿ ಪರ ಎಲ್ಲಿಯೂ ಮತ ಕೇಳಿಲ್ಲ. ಅಲ್ಲದೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಿದ್ದು, ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಮೈತ್ರಿ ಧರ್ಮ ಪಾಲಿಸದ ವಿಶ್ವನಾಥ್ ಸಮನ್ವಯ ಸಮಿತಿಯಲ್ಲಿ ಸ್ಥಾನ ವಹಿಸುವುದು ಖಂಡನೀಯ. ಅವರು ತಮ್ಮ ಧೋರಣೆ ಬದಲಿಸಿಕೊಳ್ಳಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸುವ ಅನಿವಾರ್ಯತೆಯನ್ನು ಅವರೇ ಸೃಷ್ಟಿ ಮಾಡುತ್ತಾರೆ ಎಂದರು.












Click it and Unblock the Notifications