ಮೈಸೂರು ಅತ್ಯಾಚಾರ ಪ್ರಕರಣ: ಯುವತಿ ಕರೆದೊಯ್ದ ಪೋಷಕರು?
ಮೈಸೂರು, ಆಗಸ್ಟ್ 28: ಆ.24ರಂದು ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈ ನಡುವೆ ವಿಷಯ ತಿಳಿದು ಮುಂಬೈನಿಂದ ಮೈಸೂರಿಗೆ ಬಂದ ಯುವತಿಯ ಪೋಷಕರು, ಸಂತ್ರಸ್ತ ಯುವತಿಯನ್ನು ಶುಕ್ರವಾರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು, ರಸ್ತೆ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ. ನಂತರ ವಿಮಾನ ಮೂಲಕ ಮುಂಬೈಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಗ್ಯಾಂಗ್ ರೇಪ್ ಒಳಗಾದ 22 ವರ್ಷದ ಯುವತಿ ಮುಂಬೈನ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದವಳೆನ್ನಲಾಗಿದೆ. ಈ ಪ್ರಕರಣದಿಂದ ತಮ್ಮ ಮಗಳ ಮೇಲೆ ಆಗಬಹುದಾದ ಮಾನಸಿಕ ಒತ್ತಡವನ್ನು ತಗ್ಗಿಸುವ ಕಾರಣಕ್ಕೆ, ಮೈಸೂರು ಪೊಲೀಸರಿಗೂ ಮಾಹಿತಿ ನೀಡದೆ ತಮ್ಮ ಮಗಳನ್ನು ಮುಂಬೈಗೆ ಕರೆದುಕೊಂಡು ಹೋಗಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಡಿಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ
ಸಾಂಸ್ಕೃತಿಕ ನಗರಿ ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿರುವ ಐವರು ಆರೋಪಿಗಳನ್ನು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಇಂದು (ಶನಿವಾರ) ಮಧ್ಯಾಹ್ನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡುವ ಸಾಧ್ಯತೆ ಇದೆ.
ಮೈಸೂರು ಸೇರಿದಂತೆ ದೇಶದೆಲ್ಲೆಡೆ ಆತಂಕ ಮೂಡಿಸಿದ್ದ ಎಂಬಿಎ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಬೇಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದು, ಯುವತಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಐವರು ಕಾಮಾಂಧರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಮೈಸೂರಿನಲ್ಲಿ ಆ.24ರಂದು ನಡೆದ ಗ್ಯಾಂಗ್ ರೇಪ್ ಪ್ರಕರಣ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ರಾಜಕೀಯ ಪಕ್ಷಗಳು, ವಿವಿಧ ಸಂಘಟನೆ ಹಾಗೂ ವಿದ್ಯಾರ್ಥಿಗಳು ಮೈಸೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ನೀಚಕೃತ್ಯವೆಸಗಿದ ಕಾಮುಕರ ಬಂಧನಕ್ಕೆ ಬಲೆ ಬೀಸಿದ ಮೈಸೂರು ಪೊಲೀಸರು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ 5 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿನ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕರು ನಂತರ ತಲೆಮರೆಸಿಕೊಂಡಿದ್ದರು. ಹೀಗಾಗಿ ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡಗಳನ್ನು ರಚಿಸಿ ತನಿಖೆ ನಡೆಸಿದ ಪೊಲೀಸರು, ತಮಿಳುನಾಡು ಹಾಗೂ ಕೇರಳದ ಐವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧಿತರಾಗಿರುವ ಐವರಲ್ಲಿ ಓರ್ವ ಚಾಮರಾಜನಗರದವನೆಂದು ತಿಳಿದುಬಂದಿದ್ದು, ಉಳಿದ ನಾಲ್ವರು ಆರೋಪಿಗಳು ತಮಿಳುನಾಡು ಮೂಲದವರು ಎನ್ನಲಾಗಿದೆ. ಈ ಎಲ್ಲಾ ಆರೋಪಿಗಳು ಕೂಲಿ ಕಾರ್ಮಿಕರು ಅಂತ ಹೇಳಲಾಗುತ್ತಿದೆ. ಈ ನಡುವೆ ಪ್ರಕರಣದಲ್ಲಿ ಭಾಗಿಯಾಗಿದ್ದ ೬ನೇ ಆರೋಪಿ ಎಸ್ಕೇಪ್ ಆಗಿದ್ದು, ಈತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ರಾತ್ರಿಯೇ ಸ್ಥಳಕ್ಕೆ ಹೋಗಿದ್ದ ತಂದೆ
ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಈಗಾಗಲೇ ಪ್ರಕರಣದ ಕುರಿತು ತನಿಖೆ ನಡೆಸಿರುವ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಈ ನಡುವೆ ಘಟನೆ ನಡೆದ ದಿನದಂದು ಅತ್ಯಾಚಾರಕ್ಕೊಳಗಾದ ಯುವತಿ ಜೊತೆಗೆ ತೆರಳಿದ್ದ ಯುವಕನ ತಂದೆ ಅಂದು ರಾತ್ರಿಯೇ ಸ್ಥಳಕ್ಕೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ್ದ ಯುವಕನ ತಂದೆ, ಸಂತ್ರಸ್ತೆ ಹಾಗೂ ಯುವಕನನ್ನು ನಿರ್ಜನ ಪ್ರದೇಶದಿಂದ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು ಎನ್ನಲಾಗಿದ್ದು, ಯುವಕನ ತಂದೆಯ ಈ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.












Click it and Unblock the Notifications