ಮೋದಿ ಚುನಾವಣಾ ಭಾಷಣಕ್ಕೆ ಮೈಸೂರಿನಲ್ಲಿ ಬೃಹತ್ ವೇದಿಕೆ ಸಜ್ಜು
ಮೈಸೂರು, ಏಪ್ರಿಲ್ 9:ಇಂದು ಮಂಗಳವಾರ (ಏ.09) ಮೈಸೂರಿನಲ್ಲಿ ಕಮಲ ಪಾಳಯದ ನಾಯಕರು ಬೀಡುಬಿಟ್ಟಿದ್ದಾರೆ. ಕಾರಣ ಸಾಂಸ್ಕೃತಿಕ ನಗರಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಂದಿ ಹಾಡಲಿದ್ದಾರೆ. ಬಿಜೆಪಿ ಶಕ್ತಿ ಪ್ರದರ್ಶನಕ್ಕಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಭಾಂಗಣ ಸಿದ್ಧಪಡಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅವರು ಮತಯಾಚಿಸಲಿದ್ದಾರೆ. ಮೋದಿ ಅವರ ಭೇಟಿ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹುರುಪು ತುಂಬಲಿದೆ. ಜೊತೆಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಕಣ ರಂಗೇರಲಿದೆ.
ಸಂಜೆ 4 ಗಂಟೆಗೆ ಆರಂಭವಾಗಲಿರುವ ಬೃಹತ್ ಸಮಾವೇಶದಲ್ಲಿ ಸಾವಿರಾರು ಜನರನ್ನು ಸೇರಿಸಲು ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗದಲ್ಲಿ ನೆರಳಿಗಾಗಿ ಜರ್ಮನ್ ಟೆಂಟ್ ಮಾದರಿಯ ಸಭಾಂಗಣ ನಿರ್ಮಿಸಲಾಗಿದೆ.
ಪ್ರತಿ ಪ್ರವೇಶದ್ವಾರಗಳಿಗೂ ಮೆಟಲ್ ಡೋರ್ ಡಿಟೆಕ್ಟರ್ ಅಳವಡಿಸಲಾಗಿದೆ. 12 ಅಡಿ ಎತ್ತರದ ಹಾಗೂ 30X50 ವಿಸ್ತೀರ್ಣದ ವೇದಿಕೆ ಸಿದ್ಧಪಡಿಸಲಾಗಿದೆ. 12 ಪ್ರವೇಶದ್ವಾರಗಳು ಇವೆ. ಬಿಸಿಲು ಹೆಚ್ಚಾಗಿರುವುದರಿಂದ ಸಭಾಂಗಣಕ್ಕೆ ಪೂರ್ಣವಾಗಿ ಶೀಟು ಹಾಕಲಾಗಿದೆ.
ಈ ಕಾರ್ಯಕ್ರಮ ಸುಮಾರು 1 ಗಂಟೆ ನಡೆಯಲಿದೆ. ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳಿಂದ ಜನರನ್ನು ಕರೆತರಲು ವಾಹನ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ
ಮೋದಿ ಅವರು ಚಿತ್ರದುರ್ಗದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಂಡು ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಬಳಿಕ ಕೊಯಮತ್ತೂರಿಗೆ ತೆರಳಲಿದ್ದಾರೆ.

ಬಿಜೆಪಿ ಸರ್ಕಾರದ ಸಾಧನೆಯ ಮಾಹಿತಿ
ಮೋದಿ ಅವರು ಐದು ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಸಾಧನೆಗಳನ್ನು ಜನರ ಮುಂದೆ ಇಡಲಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಪಕ್ಷವು ಕೈಗೆತ್ತಿಕೊಳ್ಳಲಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಲಿದ್ದಾರೆ ಎಂದು ಪ್ರತಾಪ ಸಿಂಹ ಮಾಹಿತಿ ನೀಡಿದರು.

ಮೈಸೂರಿಗೆ ಮೂರನೇ ಬಾರಿ ಭೇಟಿ
2014ರ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮೋದಿ ಅವರು ಪ್ರಧಾನಿಯಾದ ಮೇಲೆ ಮೈಸೂರಿಗೆ ಮೂರನೇ ಬಾರಿ ಭೇಟಿ ನೀಡುತ್ತಿದ್ದಾರೆ. 2016ರ ಜನವರಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ನಡೆದ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದರು. 2018ರ ಚುನಾವಣೆಗೂ ಮುನ್ನ ಅಂದರೆ ಫೆಬ್ರುವರಿಯಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.

ಸೆಲ್ಫಿ ತೆಗೆದುಕೊಳ್ಳಲು ಬೂತ್ ನಿರ್ಮಾಣ
ಮೋದಿ ಅವರ ಜತೆ ಸೆಲ್ಫಿ ತೆಗೆದುಕೊಳ್ಳ ಬಯಸುವವರಿಗಾಗಿ ಒಂದು ಬೂತ್ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಸ್. ಎ.ರಾಮದಾಸ್ ತಿಳಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಭಾಗವಹಿಸಲಿದ್ದಾರೆ.












Click it and Unblock the Notifications