ಕೆಲವೇ ದಿನಗಳಲ್ಲಿ ಮೈಸೂರು–ಕುಶಾಲನಗರ ರೈಲ್ವೆ ನಿರ್ಮಾಣದ ಕಾಮಗಾರಿ ಆರಂಭ
ಮೈಸೂರು, ಜುಲೈ 11: ಬಹುದಿನಗಳ ಮೈಸೂರು, ಕುಶಾಲನಗರ ರೈಲ್ವೆ ನಿರ್ಮಾಣದ ಕಾಮಗಾರಿಗೆ ಕೊನೆಗೂ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೈಸೂರಿನ ಬೆಲಗೊಳ, ಕುಶಾಲನಗರ, ಹಾಸನದ ಆಲೂರು, ಬೇಲೂರು ಮಾರ್ಗಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. 87 ಕಿ.ಮೀ ಉದ್ದದ ಕಾಮಗಾರಿ ಮಾರ್ಗಕ್ಕೆ 1,855 ಕೋಟಿ ಅನುದಾನವನ್ನು ಈ ಬಾರಿಯ ಬಜೆಟ್ ನಲ್ಲಿ ನೀಡಲಾಗಿದೆ.
ಕೇಂದ್ರ ಸರ್ಕಾರದ ಈ ನೂತನ ಯೋಜನೆಯಿಂದಾಗಿ ರಾಜ್ಯದ ಪ್ರಮುಖ ಪ್ರವಾಸಿ ತಾಣ ಕೊಡಗು ಜಿಲ್ಲೆಗೆ ರೈಲ್ವೆ ಸಂಪರ್ಕ ಲಭಿಸಿದಂತಾಗಲಿದೆ. ಇದರಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ ಹಾಗೂ ಕುಶಾಲನಗರದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಜೊತೆಗೆ ಈ ಭಾಗದ ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗೂ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ವಿವಿಧೆಡೆಯಿಂದ ಕೊಡಗು ಜಿಲ್ಲೆಗೆ ಬರುತ್ತಾರೆ. ಹಲವು ವರ್ಷಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ರೈಲು ಮಾರ್ಗ ನಿರ್ಮಾಣ ಸಂಬಂಧ ಸಂಸದ ಪ್ರತಾಪಸಿಂಹ ಅವರು ರೈಲ್ವೆ ಸಚಿವರನ್ನು ಭೇಟಿಯಾಗಿ ಮನವಿ ಸಹ ನೀಡಿದ್ದರು.

ಕೇಂದ್ರ ಹಾಗೂ ರಾಜ್ಯ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವಾಸಿ ತಾಣ ಕೊಡಗಿನಲ್ಲಿ ರೈಲು ಮಾರ್ಗ ನಿರ್ಮಿಸುವುದರಿಂದ ಪರಿಸರಕ್ಕೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರಿಂದ ವಿಳಂಬವಾಗಿತ್ತು. ಮೈಸೂರಿನಿಂದ ಕುಶಾಲನಗರದವರೆಗೆ ರೈಲು ಸಂಪರ್ಕ ಕಲ್ಪಿಸಲು ಈ ಹಿಂದೆಯೇ ಸಮೀಕ್ಷೆ ನಡೆಸಲಾಗಿತ್ತು. ಈ ಮಾರ್ಗವು ಲಾಭದಾಯಕವಲ್ಲ ಎಂದು ರೈಲ್ವೆ ಅಧಿಕಾರಿಗಳು ಯೋಜನೆಯನ್ನು ಕೈಬಿಟ್ಟಿದ್ದರು. ಈಗ ಕಾಮಗಾರಿ ಕೈಗೆತ್ತಿಕೊಳ್ಳಲು ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ.












Click it and Unblock the Notifications