ಮೈಸೂರು: ಪಾಲಿಕೆ ಆಯುಕ್ತರ ರಾಜೀನಾಮೆ ಹಿಂದಿದ್ಯಾ ಭೂ ಕಬಳಿಕೆದಾರರ ಸಂಚು
ಮೈಸೂರು, ಜೂನ್ 4: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಿಚಾರ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪಾಲಿಕೆ ಆಯುಕ್ತರ ಈ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು? ಎಂಬ ಬಗ್ಗೆ ಹಲವು ಅನುಮಾನ ವ್ಯಕ್ತವಾಗುತ್ತಿದೆ.
Recommended Video
ಮೇಲ್ನೋಟಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮಾನಸಿಕ ಕಿರುಕುಳದಿಂದ ತಾವು ರಾಜೀನಾಮೆ ನೀಡುತ್ತಿರುವುದಾಗಿ ಶಿಲ್ಪಾನಾಗ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಮೈಸೂರಿನಲ್ಲಿ ನಡೆದಿದೆ ಎನ್ನಲಾಗಿರುವ ಭೂ ಒತ್ತುವರಿ ಕುರಿತು ತನಿಖೆ ಆರಂಭವಾಗುತ್ತಿರುವ ಬೆನ್ನಲ್ಲೇ ಶಿಲ್ಪಾನಾಗ್ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸ್ಥಳೀಯ ಜನಪ್ರತಿನಿಧಿಗಳ ಚದುರಂಗದ ಆಟ
ಐಎಎಸ್ ಅಧಿಕಾರಿ ಶಿಲ್ಪಾನಾಗ್, ಪಾಲಿಕೆ ಆಯುಕ್ತರಾಗಿ ಮೈಸೂರಿಗೆ ಬಂದಾಗಿನಿಂದ ತಮ್ಮ ಕೆಲಸದಿಂದ ಗಮನ ಸೆಳೆದಿದ್ದರು. ಮುಖ್ಯವಾಗಿ ಕೊರೊನಾ ನಿರ್ವಹಣೆಯಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡುತ್ತಿದ್ದ ಅವರು, ಹಲವು ಹೊಸ ಕಾರ್ಯಕ್ರಮಗಳನ್ನು ಸಹ ಜಾರಿಗೊಳಿಸುವ ಮೂಲಕ ಕೊರೊನಾ ಕಂಟ್ರೋಲ್ಗೆ ನಿರಂತರವಾಗಿ ಶ್ರಮಿಸುತ್ತಿದ್ದರು. ಆದರೆ ಗುರುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಏಕಾಏಕಿ ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.
ಡಿಸಿ ಕಾರ್ಯವೈಖರಿಗೆ ಬೇಸರ, ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ
ಹೀಗಾಗಿ ಶಿಲ್ಪಾನಾಗ್ ಅವರ ರಾಜೀನಾಮೆ ಹಿಂದಿರುವ ಅಸಲಿ ಕಾರಣ ಏನು? ಎಂಬ ಬಗ್ಗೆ ಎಲ್ಲೆಡೆ ಚರ್ಚೆ ಶುರುವಾಗಿದೆ. ಅಸಲಿಗೆ ರೋಹಿಣಿ ಸಿಂಧೂರಿ ಕಾರ್ಯವೈಖರಿಗೆ ಬೇಸತ್ತು ಶಿಲ್ಪಾನಾಗ್ ರಾಜೀನಾಮೆ ನೀಡಿದ್ದರೂ, ಸ್ಥಳೀಯ ಜನಪ್ರತಿನಿಧಿಗಳ ಚದುರಂಗದ ಆಟಕ್ಕೆ ಪಾಲಿಕೆ ಆಯುಕ್ತೆ ಬಲಿಯಾದರೆ ಎಂಬ ಅನುಮಾನ ಕಾಡುತ್ತಿದೆ.
ರಾಜೀನಾಮೆ ಹಿಂದೆ ಭೂ ಮಾಫಿಯಾ?
ಹೇಳಿ ಕೇಳಿ ಮೈಸೂರು ವೇಗವಾಗಿ ಬೆಳೆಯುತ್ತಿರುವ ನಗರ. ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಕೂಡ ಜೋರಾಗಿದೆ. ಈ ನಡುವೆ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ತಾಲೂಕಿನ ಕೇರ್ಗಳ್ಳಿ, ಯಡಹಳ್ಳಿ ವ್ಯಾಪ್ತಿಯಲ್ಲಿ ಭೂ ಕಬಳಿಕೆ ಮಾಡಿರುವುದು ಆರ್ಟಿಐ ಕಾರ್ಯಕರ್ತರೊಬ್ಬರ ಮೂಲಕ ಬೆಳಕಿಗೆ ಬಂದಿತ್ತು. ಜೊತೆಗೆ ಇದಕ್ಕೆ ಸಂಬಂಧಿಸಿದ ಕಡತಗಳನ್ನು ಮುಡಾ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದರು. ಹೀಗಾಗಿ ಪಾಲಿಕೆ ಆಯುಕ್ತೆ ರಾಜೀನಾಮೆ ಹಿಂದೆ ಭೂ ಮಾಫಿಯಾ ಕೈವಾಡವಿದೆಯೇ? ಎಂಬ ಅನುಮಾನ ಮೂಡಿದೆ.
ಜನಪ್ರತಿನಿಧಿಗಳ ಚದುರಂಗದ ಆಟ?
ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿ ಮೈಸೂರಿಗೆ ಬಂದ ಬಳಿಕ ಅವರ ಕಾರ್ಯವೈಖರಿ ಬಗ್ಗೆ ಸಾಕಷ್ಟು ನಿರೀಕ್ಷೆಗಳಿತ್ತು. ಆದರೆ ದಿನ ಕಳೆದಂತೆ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿಗಳ ಕೆಲಸದ ಬಗ್ಗೆ ಸಾಕಷ್ಟು ಆಕ್ಷೇಪಗಳು ಬಂದರೂ ಸರ್ಕಾರ ಯಾವುದೇ ಕ್ರಮಕ್ಕೂ ಮುಂದಾಗಲಿಲ್ಲ. ಈ ಎಲ್ಲದರ ಬೆನ್ನಲ್ಲೇ ಮೈಸೂರಿನಲ್ಲಿ ನಡೆದಿದೆ ಎನ್ನಲಾಗಿರುವ ಭೂ ಒತ್ತುವರಿ ಸಂಬಂಧಿಸಿದಂತೆ ಡಿಸಿ ರೋಹಿಣಿ ಸಿಂಧೂರಿ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವ ಕಾರ್ಯಕ್ಕೆ ಮುಂದಾಗಿದ್ದರು.
ಕೆಲವು ಜನಪ್ರತಿನಿಧಿಗಳ ನಿದ್ದೆಗೆಡಿಸಿದೆ
ಈ ಬೆಳವಣಿಗೆ ಭೂ ಮಾಫಿಯಾದಾರರು ಹಾಗೂ ಅದರ ಹಿಂದಿರುವ ಕೆಲವು ಜನಪ್ರತಿನಿಧಿಗಳ ನಿದ್ದೆಗೆಡಿಸಿದೆ. ಹೀಗಾಗಿ ಜಿಲ್ಲಾಧಿಕಾರಿಗಳು ಭೂ ಒತ್ತುವರಿ ಕುರಿತು ತನಿಖೆ ಮಾಡದಂತೆ ತಡೆಯುವ ಸಲುವಾಗಿ ಹಾಗೂ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿಸುವ ಹುನ್ನಾರ ನಡೆದಿದೆ. ಇದಕ್ಕಾಗಿ ಬಲವಾದ ಕಾರಣ ಹುಡುಕುತ್ತಿದ್ದ ಭೂ ಮಾಫಿಯಾದಾರರು, ಜನಪ್ರತಿನಿಧಿಗಳು ತಮ್ಮ ಚದುರಂಗದ ಆಟಕ್ಕೆ ಪಾಲಿಕೆ ಆಯುಕ್ತರನ್ನು ಬಳಸಿಕೊಂಡಿದ್ದಾರೆ. ಅವರ ಮೂಲಕ ಡಿಸಿ ವಿರುದ್ಧ ಗಂಭೀರ ಆರೋಪ ಮಾಡಿಸಿ, ರೋಹಿಣಿ ಸಿಂಧೂರಿ ಅವರ ಕಾರ್ಯಕ್ಷಮತೆಯನ್ನು ಹಾಳು ಮಾಡುವ ಹಾಗೂ ವರ್ಗಾವಣೆ ಮಾಡಿಸುವ ಸಂಚು ನಡೆದಿದೆ ಎಂಬ ಗುಮಾನಿ ಹರಿದಾಡುತ್ತಿದೆ.