ಮೈಸೂರು ಮೆಡಿಕಲ್ ಕಾಲೇಜು ನ್ಯೂನತೆಗೆ ಶೀಘ್ರದಲ್ಲೇ ಪರಿಹಾರ: ವೈದ್ಯಕೀಯ ಶಿಕ್ಷಣ ಸಚಿವ
ಮೈಸೂರು, ನವೆಂಬರ್ 11: ಮೈಸೂರು ಮೆಡಿಕಲ್ ಕಾಲೇಜು ಆಡಳಿತದಲ್ಲಿ ಕಂಡುಬಂದಿರುವ ನ್ಯೂನತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೊರಗುತ್ತಿಗೆ ವಿಷಯದಲ್ಲಿ ಲೋಪಗಳನ್ನು ಸರಿಪಡಿಸಲು ಮೆಡಿಕಲ್ ಕಾಲೇಜು, ಕೆ.ಆರ್ ಆಸ್ಪತ್ರೆ, ಚೆಲುವಾಂಬ ಮತ್ತು ಪಿಕೆ ಸ್ಯಾನಿಟೋರಿಯಂಗಳಿಗೆ ಒಂದೇ ಗುತ್ತಿಗೆ ನೀಡಬೇಕು, ಪ್ರತ್ಯೇಕವಾಗಿ ನೀಡಿರುವುದನ್ನು ತಕ್ಷಣ ರದ್ದು ಮಾಡಬೇಕು ಎಂದು ಆದೇಶಿಸಿದರು.
ಗುಣಮಟ್ಟ ಹಾಗೂ ಪಾರದರ್ಶಕತೆಗೆ ಒತ್ತು ನೀಡಬೇಕು. ಒಂದು ವೇಳೆ ಕಾನೂನಿನ ತೊಡಕು ಎದುರಾದರೆ ಸರ್ಕಾರಕ್ಕೆ ವರದಿ ಸಲ್ಲಿಸಿ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಬುಧವಾರ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಹಾಗೂ ಆಡಳಿತದ ಪ್ರಗತಿ ಪರಿಶೀಲನೆ ನಡೆಸಿ ಸೂಚನೆ ನೀಡಿದರು.

ಲೋಪಗಳಿಗೆ ಅವಕಾಶ ನೀಡಿದರೆ ಸಹಿಸಲು ಸಾಧ್ಯವಿಲ್ಲ
ಸಂಶೋಧನೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಕಟವಾದ ಸಂಶೋಧನಾ ಲೇಖನಗಳ ಮಾಹಿತಿ ನೀಡಲು ಪರದಾಡಿದ ಡೀನ್ ನಾಗರಾಜು ಅವರನ್ನು ತರಾಟೆಗೆ ತೆಗೆದುಕೊಂಡರು. ಜವಾಬ್ದಾರಿ ಹುದ್ದೆಯಲ್ಲಿ ಇರುವವರು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ ಆ ಹುದ್ದೆಯಲ್ಲಿ ಇರಬಾರದು. ಇನ್ಮುಂದೆ ಲೋಪಗಳಿಗೆ ಅವಕಾಶ ನೀಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ಕಟ್ಟಡ ನಿರ್ವಹಣೆಗೆ ಇರುವ ಹಣದ ಬಳಕೆ ಮಾಡದೇ ಮೂರು ವರ್ಷದಿಂದ ಕಾಲಾಹರಣ ಮಾಡುತ್ತಿರುವುದನ್ನು ಕಂಡು ಕೆಂಡಾಮಂಡಲರಾದ ಸಚಿವರು, ತಕ್ಷಣ ಆದ್ಯತೆ ಮೇರೆಗೆ ಆಗಬೇಕಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು.
ಹಾಸ್ಟೆಲ್ ಗಳ ದುರಸ್ತಿ ಮತ್ತು ಉಪಕರಣಗಳ ಖರೀದಿ ವಿಷಯದಲ್ಲಿ ಸರಕಾರದ ನಿಯಮಗಳ ಅಡಿಯಲ್ಲಿ ಟೆಂಡರ್ ಕರೆಯಬೇಕು. ನಿಗದಿತ ಅರ್ಹತೆ ಹೊಂದಿರುವ ಏಜೆನ್ಸಿಗಳ ಮೂಲಕವೇ ಖರೀದಿ ಪ್ರಕ್ರಿಯೆ ನಡೆಯುವಂತೆ ಎಚ್ಚರವಹಿಸಬೇಕು. ಸಂಬಂಧಿಸಿದ ಪ್ರಕ್ರಿಯೆಗಳ ಮಾಹಿತಿಯನ್ನು ಡಿಎಂಇ ಅವರಿಗೆ ನೀಡುವಂತೆ ತಾಕೀತು ಮಾಡಿದರು.

ಕೆ.ಆರ್ ಆಸ್ಪತ್ರೆ ದುರಸ್ತಿ ಕಾರ್ಯಕ್ಕೆ 52 ಕೋಟಿ ರೂ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಾಗೇಂದ್ರ ಅವರ ಮನವಿಗೆ ಭರವಸೆ ನೀಡಿದರು. ಮುಂದಿನ ವರ್ಷಕ್ಕೆ ನೂರು ವರ್ಷ ಪೂರೈಸುವ ಕೆ.ಆರ್ ಆಸ್ಪತ್ರೆ ಕಟ್ಟಡಗಳ ನವೀಕರಣ ಮತ್ತು ದುರಸ್ತಿ ಕಾರ್ಯಕ್ಕೆ 52 ಕೋಟಿ ರೂ.ಗಳ ಪ್ರಸ್ತಾವನೆಗೆ ಅನುಮೋದನೆ ನೀಡುವುದಾಗಿ ತಕ್ಷಣ ಅದನ್ನು ಕಳುಹಿಸಿಕೊಡುವಂತೆ ಸೂಚನೆ ನೀಡಿದರು. ಇಲಾಖೆ ಕಾರ್ಯದರ್ಶಿ ಮತ್ತು ಡಿಎಂಇ ಅವರು ನಿಯಮಿತವಾಗಿ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಬೇಕು ಮತ್ತು ಅಗತ್ಯ ಇರುವ ಕಡೆ ಸ್ಥಳ ಪರಿಶೀಲನೆ ನಡೆಸಬೇಕು. ಕಾಟಾಚಾರಕ್ಕೆ ಸಭೆ ನಡೆಸಿದರೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಜನರಿಕ್ ಔಷಧಿ ಮಳಿಗೆ ತಕ್ಷಣ ಆರಂಭಿಸಬೇಕು
ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮತ್ತು ಬಳ್ಳಾರಿ ಮೆಡಿಕಲ್ ಕಾಲೇಜುಗಳು ರಾಜ್ಯದ ಹಳೆಯ ಮತ್ತು ಪ್ರತಿಷ್ಠಿತ ಸಂಸ್ಥೆಗಳಾಗಿದ್ದು, ಇವುಗಳನ್ನು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ ಪಡಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದರು.
ಜನರಿಕ್ ಔಷಧಿ ಮಳಿಗೆ ತಕ್ಷಣ ಆರಂಭಿಸಬೇಕು, ಹೊರಗಿನಿಂದ ಖರೀದಿಗೆ ಚೀಟಿ ಕೊಡುವ ಪರಿಪಾಠ ನಿಲ್ಲಬೇಕು. ಕೆಲ ದಿನಗಳಲ್ಲಿ ಸರಕಾರಿ ಔಷಧ ಮಳಿಗೆಗಳಲ್ಲಿ ಖಾಸಗಿ ಕಂಪನಿಗಳ ಔಷಧಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಇಂತಿಷ್ಟು ವ್ಯಾಪ್ತಿಯಲ್ಲಿ ಖಾಸಗಿ ಮಳಿಗೆ ತೆರೆಯುವಂತಿಲ್ಲ ಎಂದೂ ಕಾನೂನು ಜಾರಿಗೊಳಿಸಲಾಗಯವುದು ಎಂದರು.

ಪುರುಷರ ವಿದ್ಯಾರ್ಥಿ ನಿಲಯಕ್ಕೆ ಭೇಟಿ
ಬೆಂಗಳೂರು ಮೆಡಿಕಲ್ ಕಾಲೇಜು ಮಾದರಿಯಲ್ಲೇ ಸ್ಕಿಲ್ ಲ್ಯಾಬ್ ಅನ್ನು ಎಂಎಂಸಿಯಲ್ಲಿ ಆರೋಗ್ಯ ವಿವಿ ಸ್ಥಾಪಿಸಲಾಗುವುದು. ಇಲ್ಲಿನ ನಾಲ್ಕು ಆಸ್ಪತ್ರೆಗಳ ಮೇಲುಸ್ತುವಾರಿಗೆ ವಿಶೇಷ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಟ್ರಾಮಾ ಕೇರ್ ಸೆಂಟರ್ ಕಾಮಗಾರಿ ವಿಳಂಬಕ್ಕೆ ಕಾರಣಗಳನ್ನು ಕೇಳಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು. ಸಿಎಸ್ಆರ್ ಮೂಲಕ ಹೆಚ್ಚಿನ ನೆರವು ಪಡೆಯಲು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದರು. ಶಾಸಕರಾದ ನಾಗೇಂದ್ರ ಹಾಜರಿದ್ದರು.
ಮೈಸೂರಿನ ಸರಕಾರಿ ಮೆಡಿಕಲ್ ಕಾಲೇಜಿನ ಪುರುಷರ ವಿದ್ಯಾರ್ಥಿ ನಿಲಯಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಭೇಟಿ ನೀಡಿ, ಕಟ್ಟಡದ ದುಸ್ಥಿತಿ ಮತ್ತು ಕೈಗೊಳ್ಳಬೇಕಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡದ ಅಧ್ಯಯನ ವರದಿ
ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡದ ಬಗ್ಗೆ ವರದಿ ನೀಡಲು ಇಂಜಿನಿಯರ್ ಗಳಿಗೆ ಸೂಚಿಸಿದ್ದು, ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ಕಟ್ಟಡದ ಪರಿಶೀಲನೆ ನಡೆಸಿದ ಬಳಿ ಮಾತನಾಡಿದ ಅವರು, "ಇದು 58 ವರ್ಷದಷ್ಟು ಹಳೆ ಕಟ್ಟಡವಾಗಿದ್ದು, ವಿದ್ಯಾರ್ಥಿಗಳು ಶೋಚನೀಯ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ದುಃಖವಾಗಿದೆ. ಇದನ್ನು ನವೀಕರಿಸಬೇಕೆ ಅಥವಾ ಹೊಸ ಕಟ್ಟಡ ನಿರ್ಮಿಸಬೇಕೆ ಎನ್ನುವ ಬಗ್ಗೆ ವರದಿ ನೀಡಲು ಇಂಜಿನಿಯರ್ ಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತಕ್ಷಣ ಕ್ರಮ ಕೈಗೊಳ್ಳಲಾಗುವುದು" ಎಂದರು.

ಅಗತ್ಯವಿದ್ದರೆ ಮಾತ್ರ ಕೋವಿಡ್ ಕೇರ್ ಸೆಂಟರ್
"ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ನಿಧಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುದಾನದಿಂದ ಕಟ್ಟಡ ಪುನರ್ ನಿರ್ಮಾಣ ಅಥವಾ ದುರಸ್ತಿ ಮಾಡಲಾಗುವುದು. ಹಿಂದಿನ ಸರ್ಕಾರಗಳು ಈ ಬಗ್ಗೆ ಗಮನಹರಿಸಿಲ್ಲ. ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ."
"ಮೈಸೂರಿನಲ್ಲಿ ಪ್ರಕರಣ ಬಹಳ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯವಿದ್ದರೆ ಮಾತ್ರ ಕೋವಿಡ್ ಕೇರ್ ಸೆಂಟರ್ ಮುಂದುವರಿಸಲಾಗುವುದು. ತಲಕಾಡಿನಲ್ಲಿ ನಡೆಯಲಿರುವ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಲಾಗುವುದು" ಎಂದು ತಿಳಿಸಿದರು.












Click it and Unblock the Notifications