ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಈಶ್ವರಪ್ಪ: ಕುತೂಹಲ ಕೆರಳಿಸಿದ ಸುದ್ದಿಗೋಷ್ಠಿ
ಮೈಸೂರು, ಏಪ್ರಿಲ್ 2: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಮತ್ತು ಪಕ್ಷದ ವರಿಷ್ಠರಿಗೆ ದೂರು ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಕುಟುಂಬ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದ ಸಚಿವ ಈಶ್ವರಪ್ಪ, ರಾಜ್ಯಪಾಲರಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಲಿಲ್ಲ. ಸಿಎಂ ಪುತ್ರ ವಿಜಯೇಂದ್ರ ಟ್ವೀಟ್ ಬಗ್ಗೆ ಎಲ್ಲ ಬೆಳವಣಿಗೆಗಳ ಬಗ್ಗೆ ಮದ್ಯಾಹ್ನ ಪ್ರತಿಕ್ರಿಯೆ ನೀಡುತ್ತೇನೆ ಎಂದಷ್ಟೇ ಹೇಳಿ ತೆರಳಿದರು.
ಈ ನಡುವೆ ಇಂದು ಮಧ್ಯಾಹ್ನ 12 ಗಂಟೆಗೆ ಸಚಿವ ಕೆ.ಎಸ್ ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಸಿಎಂ ವಿರುದ್ಧ ದೂರು ನೀಡಿರುವ ಕುರಿತಂತೆ ಮಹತ್ವದ ಮಾಹಿತಿ ನೀಡುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಸಚಿವರ ಈ ಸುದ್ದಿಗೋಷ್ಠಿ ಸ್ವತಃ ಬಿಜೆಪಿ ನಾಯಕರು ಸೇರಿದಂತೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನ ಹಂಚಿಕೆ ವಿಷಯದ ಕುರಿತು ಅಸಮಾಧಾನ ಹೊರ ಹಾಕಿದ್ದ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು.
ಸಚಿವ ಈಶ್ವರಪ್ಪ ಅವರ ಈ ನಡೆಗೆ ಬಿಜೆಪಿ ಪಾಳಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಸಿಎಂ ಆಪ್ತ ಸಚಿವರು ಹಾಗೂ ಶಾಸಕರು, ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಿದ್ದಾರೆ.