ಘನತೆ ಹೆಚ್ಚಿಸುವಂತೆ ಕುಂಭಮೇಳ ಆಯೋಜನೆ: ಕುಮಾರಸ್ವಾಮಿ
ಮೈಸೂರು, ಜನವರಿ 23: ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆಬ್ರುವರಿ 17 ರಿಂದ ನಡೆಯುವ ಕುಂಭಮೇಳ ಕಾರ್ಯಕ್ರಮ ಕರ್ನಾಟಕದ ಘನತೆ ಹೆಚ್ಚಿಸುವಂತೆ ನಡೆಯಬೇಕೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಕುಂಭಮೇಳ ಕುರಿತು ಬುಧವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಧಾರ್ಮಿಕ ಮುಖಂಡರು, ರಾಜಕೀಯ ಗಣ್ಯರು ಹಾಗೂ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಕಾವೇರಿ, ಕಪಿಲಾ, ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ ಅತ್ಯಂತ ದೊಡ್ಡ ಮಟ್ಟದಲ್ಲಿ ನಡೆಯಬೇಕು. ನಮ್ಮ ಧಾರ್ಮಿಕ ಸಂಸ್ಕೃತಿ ಹಾಗೂ ಸಂಪ್ರದಾಯಗಳ ಪ್ರತೀಕವಾಗಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

ಹಣಕಾಸಿನ ಕೊರತೆಯಿಲ್ಲ
ಮಳೆಗಾಲಕ್ಕೂ ಮುನ್ನಾ ದೇವರ ಆಶೀರ್ವಾದಬೇಕು. ಈ ವರ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬರಗಾಲವಿದೆ. ಮುಂದಿನ ವರ್ಷ ಉತ್ತಮ ಮಳೆಯಾಗಿ ಜನ ನೆಮ್ಮದಿಯಿಂದ ಬದುಕಬೇಕು ಎಂದು ಹೇಳಿದರು.
ಕುಂಭಮೇಳ ಆಯೋಜನೆಗೆ ಹಣದ ಕೊರತೆ ಇಲ್ಲ. ಸೋಪಾನಕಟ್ಟಿ, ರಸ್ತೆ ದುರಸ್ತಿ, ಶೌಚಾಲಯ, ಸ್ನಾನದ ವ್ಯವಸ್ಥೆ, ಕುಡಿಯುವ ನೀರು ಮುಂತಾದ ವ್ಯವಸ್ಥೆಗಳು ಅಚ್ಚುಕಟ್ಟಾಗಿ ಆಗಬೇಕು ಎಂದರು.
ಸುತ್ತೂರಿನ ವೀರಾಸಿಂಹಾಸನ ಮಠದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬೆಂಗಳೂರಿನ ಕೈಲಾಸ ಆಶ್ರಮದ ವಿಜಯೇಂದ್ರಪುರಿ ಸ್ವಾಮೀಜಿ ಅವರ ಆಶಯದಂತೆ ಸಲಹೆ ಪಡೆದು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಒಳ್ಳೆಯ ಮಾತನ್ನಾಡುವಂತಾಗಬೇಕು
ಈ ಕುಂಭಮೇಳಕ್ಕೆ ಹಲವಾರು ರಾಜ್ಯಗಳಿಂದ ಯತಿವರ್ಯರು ಆಗಮಿಸಲಿದ್ದಾರೆ. ಅವರಿಗೆ ಎಲ್ಲರೀತಿಯ ಸೌಕರ್ಯ ಮಾಡಿಕೊಡಬೇಕು. ಅವರು ಕರ್ನಾಟಕದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದರು.
ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಈ ಕುಂಭಮೇಳಕ್ಕೆ ಶಾಶ್ವತವಾದ ಮೂಲ ಸೌಕರ್ಯಗಳ ಒದಗಿಸಲು ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.
ಪ್ರವಾಸೋದ್ಯಮ ಇಲಾಖೆಯಿಂದ ಈ ಕ್ಷೇತ್ರದಲ್ಲಿ ಶಾಶ್ವತವಾದ ಅಭಿವೃದ್ಧಿ ಕೆಲಸ ಮಾಡಲು ನೀಲನಕ್ಷೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಉ. ಪ್ರದೇಶ ಕುಂಭಮೇಳ ಅಧ್ಯಯನ
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಸಾವಿರಾರು ಕೋಟಿ ರೂ. ಖರ್ಚಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ಅಲ್ಲಿ ಯಾವ ರೀತಿ ಆಯೋಜನೆ ಆಗಿದೆ ಎಂದು ಇಬ್ಬರು ಅಧಿಕಾರಿಗಳು ಹೋಗಿ ಅಧ್ಯಯನ ಮಾಡುವಂತೆ ಸೂಚಿಸಿದರು.
ಈ ಕುಂಭಮೇಳದ ಸಂದರ್ಭದಲ್ಲಿಯೂ ಸಹ ಸಾರ್ವಜನಿಕ ಕೆಲಸಗಳಿಗೆ ಅನನುಕೂಲ ಆಗಬಾರದು. ಸರ್ಕಾರದ ಕೆಲಸಗಳು ಸಹ ಎಂದಿನಂತೆ ನಡೆಯಬೇಕು ಎಂದರು.
ಭತ್ತ ಖರೀದಿ ಕೇಂದ್ರಗಳು ಸರಿಯಾಗಿ ಕೆಲಸ ನಿರ್ವಹಿಸದೆ ಇರುವ ಬಗ್ಗೆ ದೂರುಗಳು ಬಂದಿದೆ. ಇದರ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.

ತ್ವರಿತವಾಗಿ ಕೆಲಸ ನಡೆಯಲಿ
ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಮಾತನಾಡಿ ಮುಖ್ಯಮಂತ್ರಿಗಳ ಸೂಚನೆಯಂತೆ ಎಲ್ಲ ವ್ಯವಸ್ಥೆಗಳು ಅಟ್ಟುಕಟ್ಟಾಗಿ ನಡೆಯಬೇಕು. ಕೇವಲ 23 ದಿನಗಳು ಉಳಿದಿದೆ. ಸಮಾರೋಪಾದಿಯಲ್ಲಿ ಕೆಲಸಗಳು ಆಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದವರು
ಸಭೆಯಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಬೆಂಗಳೂರಿನ ಕೈಲಾಸ ಆಶ್ರಮದ ವಿಜಯೇಂದ್ರಪುರಿ ಸ್ವಾಮೀಜಿ, ಓಂಕಾರ ಪೀಠದ ಮಧುಸೂದನಾನಂದ ಸ್ವಾಮೀಜಿ, ಆದಿಚುಂಚನಗಿರಿ ಮಠದ ಸೋಮೇಶ್ವರನಾಥ ಸ್ವಾಮೀಜಿ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ಅಡಗೂರು ಹೆಚ್.ವಿಶ್ವನಾಥ್, ಸುರೇಶ್ ಗೌಡ, ನಾರಾಯಣಗೌಡ, ಶ್ರೀನಿವಾಸ್, ಅನ್ನದಾನಿ, ರವೀಂದ್ರ ಶ್ರೀಕಂಠೇಗೌಡ, ಲೋಕಸಭಾ ಸದಸ್ಯ ಎಲ್.ಆರ್.ಶಿವರಾಮೇಗೌಡ, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಪೊಲೀಸ್ ಅಧೀಕ್ಷಕ ಅಮಿತ್ ಸಿಂಗ್ ಉಪಸ್ಥಿತರಿದ್ದರು.












Click it and Unblock the Notifications