ಮೈಸೂರಿಗೆ ಶೀಘ್ರವೇ ವಿಮಾನ ಸೇವೆ : ಆರ್.ವಿ.ದೇಶಪಾಂಡೆ
ಮೈಸೂರು, ಜೂ.16 : ದೇಶ-ವಿದೇಶಗಳಿಂದ ಪ್ರವಾಸಿಗರನ್ನು ಮೈಸೂರು ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಆಕರ್ಷಿಸಲು ಶೀಘ್ರ ವಿಮಾನ ಸೇವೆಯನ್ನು ಆರಂಭಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಸೋಮವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕಾವೇರಿ ಪ್ರವಾಸೋದ್ಯಮ ಪ್ರಾಧಿಕಾರದ ಪ್ರಥಮ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅನೇಕ ಪ್ರವಾಸಿ ಸ್ಥಳಗಳಿವೆ, ಹೆಚ್ಚಿನ ಸಂಖ್ಯೆಯಲ್ಲಿ ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ ಎಂದರು. [ಜುಲೈನಲ್ಲಿ ಬೆಂಗಳೂರು-ಮೈಸೂರು ವಿಮಾನ ಸೇವೆ]

ಮೈಸೂರಿಗೆ ವಿಮಾನಯಾನ ಸೇವೆ ಆರಂಭವಾದರೆ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ. ವಿಮಾನ ಸೇವೆಗಾಗಿ ಏರ್ ಇಂಡಿಯ ಸಂಸ್ಥೆಯೊಂದಿಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೀಘ್ರ ವಿಮಾನ ಸೇವೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. [ಮಂಡಕಳ್ಳಿ ವಿಮಾನ ನಿಲ್ದಾಣದ ಬಗ್ಗೆ ಓದಿ]
ಕಾವೇರಿ ಪ್ರವಾಸೋದ್ಯಮ ಪ್ರಾಧಿಕಾರ : ಕಾವೇರಿ ನದಿ ಹರಿದು ಹೋಗುವ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಕಾವೇರಿ ಪ್ರವಾಸೋದ್ಯಮ ಪ್ರಾಧಿಕಾರವನ್ನು ರಚಿಸಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ಈ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಸಚಿವರು ವಿವರಣೆ ನೀಡಿದರು.
ಪ್ರವಾಸಿಗರನ್ನು ಆಕರ್ಷಿಸಲು ಮೂಲಭೂತ ಸೌಕರ್ಯ ಅಗತ್ಯವಾಗಿದೆ. ಕುಡಿಯುವ ನೀರು, ರಸ್ತೆ, ವಸತಿ, ಆಹಾರ, ವಿದ್ಯುತ್ ಹಾಗೂ ಶೌಚಾಲಯ ಸೇವೆಗಳು ಪ್ರವಾಸಿ ಸ್ಥಳಗಳಲ್ಲಿ ಮುಖ್ಯವಾಗಿ ಬೇಕಾಗುತ್ತವೆ. ರಾಜ್ಯದಲ್ಲಿ ಬಹಳಷ್ಟು ಪ್ರವಾಸಿ ತಾಣಗಳಿದ್ದರೂ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತಿದಲ್ಲ ಎಂದು ಹೇಳಿದರು.
ಕಾವೇರಿ ಪ್ರವಾಸೋದ್ಯಮ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮುದ್ರ ಹೊರತು ಪಡಿಸಿ ಎಲ್ಲಾ ರೀತಿಯ ಪ್ರವಾಸೋದ್ಯಮಕ್ಕೆ ಅವಕಾಶವಿದೆ. ಸಂಬಂಧಪಟ್ಟ ಜಿಲ್ಲೆಗಳ ಉಸ್ತುವಾರಿ ಸಚಿವರು, ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಅಭಿವೃದ್ಧಿಗೆ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದರು.












Click it and Unblock the Notifications