ಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು
ಮೈಸೂರು, ಆಗಸ್ಟ್ 20: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ(43) ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಸ್.ಆರ್. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣ, ಕೊರೊನಾ ವಾರಿಯರ್ಸ್ ಗಳ ಮೇಲಿನ ಒತ್ತಡ ಮತ್ತು ಅವರ ಮಾನಸಿಕ ಸ್ಥಿತಿಯ ಕುರಿತಾಗಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ.
ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಡಾ.ನಾಗೇಂದ್ರ ಅವರು ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡಾ.ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಗ್ಯಾಧಿಕಾರಿ ಆತ್ಮಹತ್ಯೆ: ಕೊರೊನಾ ವಾರಿಯರ್ಸ್ ಒತ್ತಡ ತಗ್ಗಿಸುವುದಾಗಿ ಸರ್ಕಾರದ ಭರವಸೆ
ಈ ನಡುವೆ ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಜರಾಬಾದ್ ನಲ್ಲಿರುವ ಡಿಎಚ್ಒ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಶರಣಾದ ಡಾ. ನಾಗೇಂದ್ರ ಅವರ ಮೃತದೇಹವನ್ನು ಇರಿಸಿ ಪ್ರತಿಭಟನೆ ನಡೆಸಿದ ನೂರಾರು ಮಂದಿ ವೈದ್ಯಕೀಯ ಸಿಬ್ಬಂದಿ, ಕರ್ತವ್ಯದಲ್ಲಿನ ಒತ್ತಡ ಹಾಗೂ ಕಿರುಕುಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ನಂಜನಗೂಡು ತಾಲೂಕಿನ ಕೊಡ್ಲಾಪುರ ಗ್ರಾಮದಲ್ಲಿ ಆರು ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಡಾ.ನಾಗೇಂದ್ರ ಅವರು, ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಅವರು ಸಾಕಷ್ಟು ಶ್ರಮಿಸಿದ್ದರು. ಆದರೆ ಮಿತಿಮೀರಿದ ಒತ್ತಡದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.