ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ
ಬೆಂಗಳೂರು, ಸೆ. 13: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ಎಸ್. ಆರ್. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಜೊತೆಗೆ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿದ್ದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಜಿ.ಪಿ. ಪ್ರಕಾಶ್ ಅವರಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಆಗಸ್ಟ್ 20 ರಂದು ನಂಜನಗೂಡು ತಾಲೂಕಾ ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಆತ್ಮಹತ್ಯಗೆ ಹಿರಿಯ ಅಧಿಕಾರಿಗಳ ಒತ್ತಡ ಕಾರಣ ಎಂದು ಆರೋಪಿಸಲಾಗಿತ್ತು. ಮೈಸೂರು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಒತ್ತಡದಿಂದ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲೆಯಾದ್ಯಂತ ಸರ್ಕಾರಿ ವೈದ್ಯರು ಅಹೋರಾತ್ರಿ ಧರಣಿ ನಡೆಸಿದ್ದರು.

ವೈದ್ಯರ ಪ್ರತಿಭಟನೆಗೆ ಮಣಿದಿದ್ದ ರಾಜ್ಯ ಸರ್ಕಾರ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿತ್ತು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ತನಿಖಾಧಿಕಾರಿಯಾಗಿ ನಿಯೋಜಿಸಲಾಗಿತ್ತು. ಜೊತೆಗೆ ಜಿಪಂ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಮೈಸೂರು ಜಿಲ್ಲಾ ಪಂಚಾಯಿತಿಯಿಂದ ವರ್ಗಾವಣೆ ಮಾಡಲಾಗಿತ್ತು.

ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿದ್ದ ಡಾ. ನಾಗೇಂದ್ರ ಅವರಿಗೆ ವೈಯಕ್ತಿಕ ಸಮಸ್ಯೆಗಳು ಇದ್ದವಾ? ಜೊತೆಗೆ ಕೌಟುಂಬಿಕ ಸಮಸ್ಯೆಗಳಿಂದ ಕರ್ತವ್ಯ ನಿರ್ವಹಣೆಯ ವೇಳೆ ಸಮಸ್ಯೆ ಎದುರಾಗಿತ್ತಾ? ಎಂಬ ವಿಚಾರಗಳು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆದಿದೆ ಎಂದು ತಿಳಿದು ಬಂದಿದೆ. ದಿ. ಡಾ. ನಾಗೇಂದ್ರ ಅವರು ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಾಗಿದೆ. ಹಾಗೂ ತನಿಖಾ ತಂಡ 150ಕ್ಕೂ ಹೆಚ್ಚು ಜನರಿಂದ ಮಾಹಿತಿ ಸಂಗ್ರಹಿಸಿದೆ.












Click it and Unblock the Notifications