ಮೈಸೂರಿನಲ್ಲಿ ಮಾರ್ಚ್ 9ರಂದು ರಾಷ್ಟ್ರೀಯ ಲೋಕ ಅದಾಲತ್
ಮೈಸೂರು, ಫೆಬ್ರವರಿ 27: ಮೈಸೂರಿನ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಮಾರ್ಚ್ 9ರಂದು ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಎಸ್.ಕೆ.ವಂಟಿಗೊಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟು 4 ಲೋಕ್ ಅದಾಲತ್ ಗಳು ನಡೆಯಲಿವೆ. ಇಲ್ಲಿ ರಾಜಿ ಮೂಲಕ ಪ್ರಕರಣಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬಹುದು ಎಂದರು.
ಜಿಲ್ಲೆಯಲ್ಲಿ 1.06 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ಇವುಗಳಲ್ಲಿ 2,600 ಕೌಟುಂಬಿಕ ಪ್ರಕರಣಗಳು, 19 ಸಾವಿರ ಚೆಕ್ಬೌನ್ಸ್ ಪ್ರಕರಣಗಳಿವೆ. ಸದ್ಯ, 2,009 ಪ್ರಕರಣಗಳು ಹಾಗೂ 750 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಲೋಕ್ ಅದಾಲತ್ ಗೆ ತೆಗೆದುಕೊಳ್ಳಲಾಗಿದೆ. ಇನ್ನು ತೆಗೆದುಕೊಳ್ಳಲು ಅವಕಾಶವಿದ್ದು, ಸಾರ್ವಜನಿಕರು ಸಂಪರ್ಕಿಸಬಹುದು ಎಂದು ತಿಳಿಸಿದರು.

ಕಳೆದ ವರ್ಷ ಪ್ರತಿ 2 ತಿಂಗಳಿಗೊಮ್ಮೆ ಲೋಕ್ ಅದಾಲತ್ ನಡೆಯುತ್ತಿತ್ತು. ಈ ವರ್ಷ ಮೂರು ತಿಂಗಳಿಗೊಮ್ಮೆ ನಡೆಯುತ್ತಿದೆ. ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಾರ್ವಜನಿಕರು ಇಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ರಾಜಿ ಸಂಧಾನದ ಮೂಲಕ ಪ್ರಕರಣ ಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ವಾಪಸ್ ನೀಡಲಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದರೆ ಮಾತ್ರ ರಾಜಿ ಮಾಡಿಕೊಳ್ಳಬಹುದು ಎಂದು ವಂಟಿಗೊಡಿ ಹೇಳಿದರು.
ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳಿಗೆ ಸಂಬಂಧಿಸಿದ ಪ್ರಕರಣಗಳು, ಪಿಂಚಣಿ, ಕಂದಾಯ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಈ ಅದಾಲತ್ ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.












Click it and Unblock the Notifications