ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಮೇ 30 : ನೂತನ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಅರಮನೆ ನಗರಿಗೆ ಆಗಮಿಸಿದ್ದು, ಶಾಸಕರಾದ ನಂತರ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಎಚ್.ಡಿ.ಕೋಟೆ ನೂತನ ಶಾಸಕ ಅನಿಲ್ ಕುಮಾರ್ ಜೊತೆ ಯತೀಂದ್ರ ಸಿದ್ದರಾಮಯ್ಯ ಬೆಟ್ಟಕ್ಕೆ ಭೇಟಿ ನೀಡಿದ್ದು, ನಾಡದೇವತೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಮಗ ಯತೀಂದ್ರ ಸಿದ್ದರಾಮಯ್ಯ ಮೈಸೂರಿನ ವರುಣ ಕ್ಷೇತ್ರದಿಂದ ನಿಂತು ಗೆದ್ದಿದ್ದರು. ಆದ ಕಾರಣ ಇಂದು ಕ್ಷೇತ್ರದ ಹಳ್ಳಿಗಳಿಗೆ ಹೋಗಿ ಅಭಿನಂದನೆ ಸಲ್ಲಿಸಲಿದ್ದಾರೆ.
ಚಾಮುಂಡಿಗೆ ಪೂಜೆ ಸಲ್ಲಿಸಿದ ಬಳಿಕ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದು, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಯತೀಂದ್ರ, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ. ಪಕ್ಷದ ವರಿಷ್ಠರಿಗೆ ನಾನು ಬದ್ದನಾಗಿರುತ್ತೇನೆ. ಸದನದಲ್ಲಿ ಬಹುಮತ ಸಾಬೀತುಪಡಿಸುವ ಅನಿವಾರ್ಯತೆ ಇದ್ದುದ್ದರಿಂದ ಕ್ಷೇತ್ರಕ್ಕೆ ಬರಲಾಗಲಿಲ್ಲ. ಇಂದು ಮೈಸೂರಿಗೆ ಬಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದೇನೆ.

ಹಾಗೆಯೇ ಸುತ್ತೂರು ಶ್ರೀಗಳ ಆರ್ಶಿವಾದ ಪಡೆದಿದ್ದೇನೆ ಎಂದರು. ವರುಣಾ ಕ್ಷೇತ್ರವನ್ನು ಸಾಕ್ಷರತೆಯ ಕ್ಷೇತ್ರವನ್ನಾಗಿ ಮಾಡುವ ಕನಸು ಕಂಡಿದ್ದೇನೆ. ಜತೆಗೆ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವುದೇ ನನ್ನ ಮೊದಲ ಆದ್ಯತೆಯಾಗಿದೆ.

ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಯ ಗುರಿ ಹೊಂದಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.











Click it and Unblock the Notifications