'ನೀರಿನ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸಿದೆ'
ಮೈಸೂರು, ಜನವರಿ 24: ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲು ಹಾಗೂ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 2,400 ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 29 ಸಾವಿರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಇದರಲ್ಲಿ ಈಗಾಗಲೇ 27 ಸಾವಿರ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದ 2 ಸಾವಿರ ಕಾಮಗಾರಿಗಳು ಬೇಸಿಗೆಗೂ ಮುನ್ನ ಪೂರ್ಣಗೊಳ್ಳಲಿವೆ.
ರಾಜ್ಯದ 284 ಬರಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರವಾದ ತೊಂದರೆ ಎದುರಾಗಿದೆ. ಜೊತೆಗೆ ಬರಪೀಡಿತವಲ್ಲದ 362 ಗ್ರಾಮಗಳಲ್ಲಿ ಕೂಡ ನೀರಿಗೆ ಸಾಕಷ್ಟು ತೊಂದರೆ ಎದುರಾಗಿದೆ. ಈ ಗ್ರಾಮಗಳಿಗೆ ಈಗಾಗಲೇ 1,386 ಟ್ಯಾಂಕರ್ ಗಳು ಹಾಗೂ ಖಾಸಗಿ ಬೋರ್ವೆಲ್ ಗಳ ಮೂಲಕ ಜನರಿಗೆ ನೀರು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ 29 ಸಾವಿರ ಕಾಮಗಾರಿಗಳನ್ನು ಕೈಗೊಳ್ಳಲು 2,400 ಕೋಟಿ ರೂ. ಹಾಗೂ ಶಾಸಕರ ನೇತೃತ್ವದ ಟಾಸ್ಕ್ ಫೋರ್ಸ್ ಗೆ 200 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗಾಗಲೇ 1,600 ಕೋಟಿ ರೂ. ವೆಚ್ಚದಲ್ಲಿ 27 ಸಾವಿರ ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 2 ಸಾವಿರ ಕಾಮಗಾರಿಗಳು ಮುಂದಿನ ಒಂದೆರಡು ತಿಂಗಳುಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ತಿಳಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಾದ್ಯಂತ ಇದೇ ಪ್ರಥಮಬಾರಿಗೆ ಹೆಚ್ಚಿನ ಪ್ರಗತಿ ಸಾಧಿಸಲಾಗಿದ್ದು, 8.50 ಕೋಟಿ ಮಾನವ ದಿನಗಳಲ್ಲಿ ಕೆಲಸ ನಿರ್ವಹಿಸಲಾಗಿದೆ. ಬರಪೀಡಿತ ಹಾಗೂ ಇತರೆ ಗ್ರಾಮಗಳ ಜನರು ಗುಳೆ ಹೋಗದಂತೆ ತಡೆಗಟ್ಟುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯಡಿ ನೆರವು ನೀಡಲಾಗಿದೆ. ಈ ಬಾರಿ 10.50 ಕೋಟಿ ಮಾನವ ದಿನಗಳ ಗುರಿಯನ್ನು ಸಾಧಿಸಲು ನಿರ್ಧರಿಸಲಾಗಿದೆ ಎಂದು ಕೃಷ್ಣ ಭೈರೇಗೌಡ ಅವರು ನುಡಿದರು.












Click it and Unblock the Notifications