ಸಮೀಪಿಸುತ್ತಿದೆ ದಸರಾ; ಉಸ್ತುವಾರಿ ಸಚಿವರ ತೀರ್ಮಾನ?
ಮೈಸೂರು, ಆಗಸ್ಟ್ 14: ಕೊರೊನಾ ಸಂಕಷ್ಟ ಹಾಗೂ ಪ್ರವಾಹದಿಂದ ಉಂಟಾಗಿರುವ ಸಮಸ್ಯೆಗಳಿಂದಾಗಿ ದಸರಾ ಆಚರಣೆಗೆ ಸಂಬಂಧಿಸಿದ ಸಿದ್ಧತೆ ಕಡೆಗೆ ಗಮನ ಹರಿಸಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸದ್ಯ ಕೋವಿಡ್ ಹಾಗೂ ಮಳೆ ಪ್ರವಾಹದ ಸಂದರ್ಭದಲ್ಲಿ ಇದರ ರಕ್ಷಣೆ ಕಾರ್ಯ ಭರದಿಂದ ಸಾಗಿದೆ. ಸಾವು-ನೋವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇವುಗಳ ಬಗ್ಗೆಯೇ ಹೆಚ್ಚು ಒತ್ತು ನೀಡಲಾಗುತ್ತಿದೆ. ಹಾಗಾಗಿ, ಇನ್ನೂ ದಸರಾ ಸಿದ್ಧತೆ ಬಗ್ಗೆ ಚಿಂತನೆ ನಡೆಸಿಲ್ಲ. ಮುಂದಿನ ವಾರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣ ಸಂಬಂಧ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳ ಸಹಕಾರವನ್ನೂ ಪಡೆದು ಉತ್ತಮ ರೀತಿ ನಿರ್ವಹಣೆ ಮಾಡಲಾಗುತ್ತಿರುವುದರಿಂದ ಸಾವಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹೀಗಾಗಿ ಶನಿವಾರ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ಸಭೆ ಕರೆಯಲಾಗಿದ್ದು, ಅಲ್ಲಿ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಇದೇ ವೇಳೆ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಯಾರು ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೋ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಈಗಾಗಲೇ ಚಿಂತನೆ ನಡೆದಿದೆ. ಸರ್ಕಾರ ಇಂತಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.











Click it and Unblock the Notifications