ಹೆಚ್ಚಾದ ಸೋಂಕು; ಮೈಸೂರಿನಲ್ಲಿ ಬದಲಾದ ಕರ್ಫ್ಯೂ ಸಮಯ
ಮೈಸೂರು, ಜುಲೈ 1: ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಸರ್ಕಾರ ಮುಂದಾಗಿದೆ. ಕರ್ಫ್ಯೂ ಸಮಯವನ್ನು ಬದಲಾಯಿಸಲು ನಿರ್ಧಾರ ಮಾಡಲಾಗಿದೆ. ಶುಕ್ರವಾರದಿಂದ ಮೈಸೂರಿನಲ್ಲಿ ಸಂಜೆ 6 ಗಂಟೆಗೇ ಎಲ್ಲಾ ಬಂದ್ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸಚಿವರ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ಅಧಿಕಾರಿಗಳಿಂದ ಕೊರೊನಾದ ಬಗ್ಗೆ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ಸಂಜೆ ಆರು ಗಂಟೆಗೇ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಯಿತು. ಶುಕ್ರವಾರದಿಂದ ಮೈಸೂರಿನಲ್ಲಿ ಸಂಜೆ ಆರು ಗಂಟೆಯಿಂದ ಬೆಳಗ್ಗೆ ಆರು ಗಂಟೆವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ.
ಮಾಸ್ಕ್ ಹಾಕದವರಿಗೆ ದಂಡ; ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ತಿಳಿಸಿದರು. ಕೊರೊನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಮುಖ್ಯ. ಈ ಹಿನ್ನೆಲೆಯಲ್ಲಿ ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡ ಹಾಕಲಿದ್ದಾರೆ. ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಪರೀಕ್ಷೆ: ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ್ಟವರ, ಅದರಲ್ಲೂ ಅವರ ಆರೋಗ್ಯದ ಸ್ಥಿತಿ ನೋಡಿಕೊಂಡು ಹೆಚ್ಚಿನ ಆದ್ಯತೆ ನೀಡಿ ಅವರನ್ನು ಪರೀಕ್ಷೆಗೊಳಪಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದರು. ಇದೇ ಸಮಯದಲ್ಲಿ ಮೈಸೂರಿನಲ್ಲಿ ಜಿಲ್ಲಾಡಳಿತ ಹಾಗೂ ವೈದ್ಯರ ತಂಡ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಅವರಿಗೆ ಸಾರ್ವಜನಿಕರ ಸಹಕಾರ ಮುಖ್ಯ. ವೈಯಕ್ತಿಕವಾಗಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
15 ದಿನಗಳಲ್ಲಿ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಸಹಾಯಧನ: ಪ್ರತಿ ಜಿಲ್ಲೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲ ಕಡೆ ಅನುದಾನ ನೀಡಲಾಗುತ್ತಿದೆ. ಬಳಿಕ ಆಯಾ ಕ್ಷೇತ್ರದ ಶಾಸಕರು ವಿತರಣೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ವಿತರಣೆ ಮಾಡುತ್ತಿಲ್ಲ ಎಂಬುದು ಸುಳ್ಳು. ಅದಕ್ಕಾಗಿ ಪ್ರತಿ ಜಿಲ್ಲೆಗೆ ನಾನೇ ಭೇಟಿ ನೀಡಿ ವಿತರಣೆ ಮಾಡುತ್ತಿದ್ದೇನೆ. ಇನ್ನು 15 ದಿನಗಳಲ್ಲಿ ಎಲ್ಲ 42685 ಆಶಾ ಕಾರ್ಯಕರ್ತೆಯರಿಗೂ ವಿತರಣೆಯಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಸಂಸದ ಪ್ರತಾಪಸಿಂಹ, ಶಾಸಕರಾದ ಎಸ್. ಎ.ರಾಮದಾಸ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್ಪಿ ರಿಶ್ಯಂತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್ ಮೊದಲಾದವರು ಇದ್ದರು.












Click it and Unblock the Notifications