ಶನಿವಾರ, ಭಾನುವಾರ ಮೈಸೂರಿಗೆ ಹೋಗುವವರ ಗಮನಕ್ಕೆ
ಮೈಸೂರು, ಜೂನ್ 12 : ವಾರಂತ್ಯದಲ್ಲಿ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರು ಇದನ್ನು ಗಮನಿಸಿಬೇಕು. ಚಾಮುಂಡಿ ಬೆಟ್ಟ ಮತ್ತು ನಂಜನಗೂಡಿನಲ್ಲಿ ದೇವರ ದರ್ಶನ ಸಿಗುವುದಿಲ್ಲ.
Recommended Video
ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಶನಿವಾರ, ಭಾನುವಾರ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ಚಾಮುಂಡಿ ಬೆಟ್ಟ ಮತ್ತು ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನ ನಿಷೇಧಿಸಿದ್ದಾರೆ.
ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಜೂನ್ 8ರಿಂದ ಮೈಸೂರಿನಲ್ಲಿ ದೇವಾಲಯಗಳಲ್ಲಿ ಭಕ್ತರ ಭೇಟಿಗೆ ಅವಕಾಶ ನೀಡಲಾಗಿತ್ತು. ಆದರೆ, ರಜೆ ದಿನಗಳಲ್ಲಿ ದೇವಾಲಯಕ್ಕೆ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪ್ರವಾಸಿಗರು ಬರುತ್ತಾರೆ.
ಆದ್ದರಿಂದ, ಶನಿವಾರ, ಭಾನುವಾರ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ಚಾಮುಂಡೇಶ್ವರಿ ಮತ್ತು ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಜನರ ಭೇಟಿಯನ್ನು ನಿಷೇಧಿಸಲಾಗಿದೆ. ಭಕ್ತರು ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ
ಶನಿವಾರ, ಭಾನುವಾರ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತದೆ. ಆಗ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಮಾರ್ಗಸೂಚಿ ಪಾಲನೆ ಕಷ್ಟವಾಗಲಿದೆ. ಆದ್ದರಿಂದ, ದೇವರ ದರ್ಶನಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ಭಕ್ತರಿಗೆ ಮಾತ್ರ ಪ್ರವೇಶವಿಲ್ಲ
ಎರಡೂ ದೇವಾಲಯಗಳಲ್ಲಿ ಶನಿವಾರ, ಭಾನುವಾರ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ನಿತ್ಯವೂ ನಡೆಯುವ ಧಾರ್ಮಿಕ ಆಚರಣೆ ನಡೆಯಲಿದೆ. ಭಕ್ತರಿಗೆ ಮಾತ್ರ ಪ್ರವೇಶ ಇರುವುದಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಪ್ರವೇಶ ನಿರ್ಬಂಧ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತಾವರೆಕಟ್ಟೆ ಕಡೆಯಿಂದ ಬೆಟ್ಟಕ್ಕೆ ಬರುವ ರಸ್ತೆಯಿಂದ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಉಳಿದ ರಸ್ತೆಗಳಿಂದ ಪ್ರವೇಶ ನಿಷೇಧಿಸಲಾಗಿದೆ. ನಂಜನಗೂಡಿನಲ್ಲಿ ದೇವರಿಗೆ ಮುಡಿ ಸಮರ್ಪಿಸುವುದಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ದರ್ಶನಕ್ಕೆ ಸಮಯ ನಿಗದಿ
ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಸೋಮವಾರದಿಂದ ಶುಕ್ರವಾರದ ತನಕ ಬೆಳಗ್ಗೆ 7ರಿಂದ ಮಧ್ಯಾಹ್ನ 1ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 5.30ರ ತನಕ ಮಾತ್ರ ದೇವರ ದರ್ಶನವನ್ನು ಪಡೆಯಬಹುದು ಎಂದು ಜಿಲ್ಲಾಡಳಿತ ಹೇಳಿದೆ.












Click it and Unblock the Notifications