ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಜೆಪಿ ಸರ್ಟಿಫಿಕೇಟ್ ಬೇಕಿಲ್ಲ: ಸಾ ರಾ ಮಹೇಶ್
ಮೈಸೂರು, ಜೂನ್ 21: ಸಿಎಂ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಬಿಜೆಪಿಯವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಚಿವ ಸಾ ರಾ ಮಹೇಶ್ ಕಮಲಪಾಳಯದ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ಡಿಕೆಯವರ ಗ್ರಾಮವಾಸ್ತವ್ಯ ಇಂದಿನಿಂದ ಪ್ರಾರಂಭವಾಗಿದೆ. ನಮ್ಮ ಸರ್ಕಾರವು ಸರಿಯಾಗಿಯೇ ನಡೆಯುತ್ತಿದೆ. ಆದರೆ ಕೆಲವರು ವಾಮಮಾರ್ಗದಿಂದ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ. ಅಂಥವರಿಂದ ಗ್ರಾಮವಾಸ್ತವ್ಯದ ಬಗ್ಗೆ ಒಳ್ಳೆಯ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದರು.
ಗ್ರಾಮ ವಾಸ್ತವ್ಯಕ್ಕೆ ಚಾಲನೆ:ನಿರೀಕ್ಷೆ ಹೆಚ್ಚಿಸಿದ ಕುಮಾರಸ್ವಾಮಿ ಭಾಷಣ
ಗ್ರಾಮವಾಸ್ತವ್ಯದಿಂದ ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ ಎಂದು ಹೇಳುವುದಿಲ್ಲ. ಆದರೆ ಒಂದಿಷ್ಟು ಸಮಸ್ಯೆಗಳಿಗೆ ಪರಿಹಾರ ಮಾತ್ರ ಖಂಡಿತ ಸಿಗಲಿದೆ. ಕೊಡಗಿನಲ್ಲಿ ಗ್ರಾಮವಾಸ್ತವ್ಯ ಮಾಡಬೇಕೆಂದು ನಮ್ಮ ಮನವಿ ಇದೆ. ಉತ್ತರ ಕರ್ನಾಟಕ ಗ್ರಾಮವಾಸ್ತವ್ಯ ಮುಗಿದ ನಂತರ ಈ ಕಡೆ ಬರುವ ಚಿಂತನೆ ಇದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ರಾಷ್ಟ್ರೀಯ ನಾಯಕರು ಹೇಳಿದ ಮೇಲೆ ಅವರ ತೀರ್ಮಾನದಂತೆ ನಡೆದುಕೊಳ್ಳಬೇಕು. ದೇವೇಗೌಡರು ತಮ್ಮ ಅನುಭವದ ಆಧಾರದ ಮೇಲೆ ಹೇಳಿಕೆ ನೀಡಿದ್ದಾರೆ. ಹಾಗೆಯೇ, ಅಂದು ಸರ್ಕಾರ ರಚನೆ ವೇಳೆ ಕಾಂಗ್ರೆಸ್ ತೆಗೆದುಕೊಂಡ ನಿರ್ಧಾರದ ಬಗ್ಗೆ ನಮಗೆ ಗೊತ್ತಿಲ್ಲ. ಮಧ್ಯಂತರ ಚುನಾವಣೆ ಬಗ್ಗೆ ಕುಮಾರಸ್ವಾಮಿ ಸೇರಿದಂತೆ ಎಲ್ಲ ನಾಯಕರ ಜೊತೆ ಚರ್ಚೆ ನಡೆಸುತ್ತೇವೆ. ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ' ಎಂದರು.
ಕುಮಾರಸ್ವಾಮಿ ಗ್ರಾಮ ವಾಸ್ತವ್ಯ, ಜನತಾದರ್ಶನಕ್ಕೆ ಚಂಡರಕಿ ಸಿದ್ಧ
ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿ, ವಿಶ್ವನಾಥ್ ಅವರ ಮಾತುಗಳನ್ನು ಬೇರೆ ಅರ್ಥದಲ್ಲಿ ನೋಡುವುದು ಬೇಡ. ಅವರ ಮಾತುಗಳು ಟೀಕೆ ಅಲ್ಲ. ಅವು ಸಲಹೆಗಳು. ಅದನ್ನು ನಾವು ಪಡೆದುಕೊಳ್ಳುತ್ತೇವೆ. ಅವರ ಆರೋಗ್ಯದ ದೃಷ್ಟಿಯಿಂದ ಅವರು ರಾಜ್ಯಾಧ್ಯಕ್ಷ ಸ್ಥಾನ ಬೇಡ ಎಂದು ರಾಜೀನಾಮೆ ನೀಡುತ್ತಿದ್ದಾರೆ. ಆದರೆ ನಾವು ನೀವೇ ಇರಬೇಕು ಎಂದು ಮನವಿ ಮಾಡಿದ್ದೇವೆ ಎಂದರು.