ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ:ಅಭ್ಯರ್ಥಿಗಳ ಆಯ್ಕೆ ವಿಳಂಬವೇಕೆ?
ಮೈಸೂರು, ಮಾರ್ಚ್ 12: ಲೋಕಸಭಾ ಚುನಾವಣಾ ಮಹಾಸಮರಕ್ಕೆ ಈಗಾಗಲೇ ದಿನಗಣನೆ ಆರಂಭವಾಗಿದೆ. ಇತ್ತ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಿತ್ರಣ ಇನ್ನೂ ಕಾವು ಪಡೆದುಕೊಂಡಂತೆ ಕಾಣುತ್ತಿಲ್ಲ.
ಕಾರಣ ಕಾಂಗ್ರೆಸ್ ಹಾಗೂ ಜಾ.ದಳ ಮೈತ್ರಿ ಹಾಗೂ ಬಿಜೆಪಿ ಇನ್ನು ತನ್ನ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಈ ಹಿಂದೆ 2008ರಲ್ಲಿ ನಡೆದ ಕ್ಷೇತ್ರ ಪುನರ್ವಿಂಗಡಣೆಯಿಂದ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ ಉದಯವಾಗಿದ್ದು, ಇದು ಮೂರನೇ ಚುನಾವಣೆಯಾಗಿದೆ.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಮೈಸೂರು ಜಿಲ್ಲೆ, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಹುಣಸೂರು, ಪಿರಿಯಾಪಟ್ಟಣ, ಕೊಡಗು ಜಿಲ್ಲೆಯ ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳು ಕೂಡ ಸೇರಿಕೊಂಡಿವೆ.
ಮೈಸೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ 16ನೇ ಲೋಕಸಭೆಯನ್ನು ಪ್ರತಿನಿಧಿಸಿದ್ದು, ಅವರ ಅಧಿಕಾರಾವಧಿ ಜೂನ್ 3ಕ್ಕೆ ಅಂತ್ಯಗೊಳ್ಳಲಿದೆ. ಉನ್ನತ ಮೂಲಗಳ ಪ್ರಕಾರ ಬಿಜೆಪಿಯಿಂದ ಹಾಲಿ ಸಂಸದ ಪ್ರತಾಪ್ ಸಿಂಹ ಅವರೇ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ ಬಿಜೆಪಿ ಅಧಿಕೃತವಾಗಿ ಹೆಸರನ್ನು ಇನ್ನೂ ಘೋಷಿಸಿಲ್ಲ.
ಹಾಗೆಯೇ ಜಾ. ದಳ-ಕಾಂಗ್ರೆಸ್ ಮೈತ್ರಿಯಲ್ಲಿ ಯಾರ ಮಡಿಲಿಗೆ ಕ್ಷೇತ್ರದ ಉಸ್ತುವಾರಿ ಬೀಳಲಿದೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಈಗಲೂ ಸಹ ಹಗ್ಗ ಜಗ್ಗಾಟ ನಡೆದಿದೆ.

ದಳದ ಪಾಲಾಗಲಿದೆ ಮೈಸೂರು
ಕಾಂಗ್ರೆಸ್ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಪಟ್ಟು ಹಿಡಿದಿದ್ದು, ಈ ಹಿಂದೆ ಮೈಸೂರು, ಇಲ್ಲವೇ ತುಮಕೂರು ಲೋಕಸಭಾ ಕ್ಷೇತ್ರವನ್ನು ತನಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಕೇಳಿಕೊಂಡಿದೆ. ಆದರೆ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದರೆ, ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಾ. ಪರಮೇಶ್ ಅವರು ಪಟ್ಟುಹಿಡಿದಿದ್ದಾರೆ. ಹಾಲಿ ಸಂಸದರು ಇರುವ ಈ ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದಾದರೆ ಮೈಸೂರು ದಳದ ಪಾಲಾಗಲಿದೆ.

ವಿಜಯಶಂಕರ್ ಪರ ಸಿದ್ದರಾಮಯ್ಯ
ಕಾಂಗ್ರೆಸ್ ಗೆ ಮೈಸೂರು-ಕೊಡಗು ಕ್ಷೇತ್ರ ಒಲಿದರೆ ಮಾಜಿ ಸಂಸದ ವಿಜಯಶಂಕರ್ ಅವರು ಅಭ್ಯರ್ಥಿಯಾಗುವ ಸಾಧ್ಯತೆಗಳು ಹೆಚ್ಚಿದೆ. ಇವರಿಗೆ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಸಿದ್ದರಾಮಯ್ಯ ಅವರು ವಿಜಯಶಂಕರ್ ಅವರ ಪರ ನಿಂತಿದ್ದಾರೆ. ಉಳಿದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಮಾಜಿ ಶಾಸಕ ವಾಸು, ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಾನೇಗೌಡ, ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ತಮ್ಮ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ.

ಅಧಿಕೃತವಾಗಿ ಹೆಸರು ಪ್ರಕಟಗೊಂಡಿಲ್ಲ
ಒಂದು ವೇಳೆ ಮೈಸೂರು ಕ್ಷೇತ್ರ ದಳಕ್ಕೆ ಒಲಿದರೆ ಮಾಜಿ ಪ್ರಧಾನಿ ದೇವೇಗೌಡ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಈ ಕ್ಷೇತ್ರದಲ್ಲಿ ದಳದಿಂದ ಯಾರು ಆಕಾಂಕ್ಷಿಗಳಿಲ್ಲ. ಪ್ರಾರಂಭದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಕೇಳಿ ಬಂದಿತ್ತಾದರೂ, ಅವರ ಮಂಡ್ಯದಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ ಮೇಲೆ ದೇವೇಗೌಡರ ಹೆಸರು ಮಾತ್ರ ಕೇಳಿ ಬರುತ್ತಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತಾದರೂ ಅಧಿಕೃತವಾಗಿ ಯಾವ ಹೆಸರನ್ನು ಪ್ರಕಟಿಸಿಲ್ಲ. ಬಿಜೆಪಿ ಕೂಡ ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸಿಲ್ಲ.

ಇದನ್ನೇ ದಳ ಪ್ರತಿಪಾದಿಸುತ್ತಿದೆ
ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಲ್ಲಿ ದಳ 3 ಕ್ಷೇತ್ರಗಳಲ್ಲಿ, ಬಿಜೆಪಿ 4 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮಾತ್ರ ಜಯ ಸಾಧಿಸಿದೆ. ಇದನ್ನೇ ದಳ ಪ್ರತಿಪಾದಿಸುತ್ತಿದ್ದು, ಮೈಸೂರು ಕ್ಷೇತ್ರವನ್ನು ತನಗೆ ಬಿಟ್ಟುಕೊಡುವಂತೆ ಕೇಳುತ್ತಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿಶ್ವನಾಥ್ ಎರಡನೇ ಸ್ಥಾನದಲ್ಲಿದ್ದರೆ, ದಳದಿಂದ ಸ್ಪರ್ಧಿಸಿದ್ದ ನ್ಯಾಯಮೂರ್ತಿ ಚಂದ್ರಶೇಖರಯ್ಯ ಮೂರನೇ ಸ್ಥಾನದಲ್ಲಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ವಿಶ್ವನಾಥ್ ಅವರು ದಳ ಸೇರಿ ಶಾಸಕರಾಗಿದ್ದಲ್ಲದೇ ರಾಜ್ಯಾಧ್ಯಕ್ಷರು ಕೂಡ ಆಗಿದ್ದಾರೆ.












Click it and Unblock the Notifications