ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಗೆ ಎದುರಾಗಿದೆ ಬಂಧನದ ಭೀತಿ
ಮೈಸೂರು, ಜುಲೈ 31 : ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಗೈರುಹಾಜರಾದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದೆ.
ಎಂ.ಕೆ.ಸೋಮಶೇಖರ್ ಅವರು ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡೆದಿರುವ ವಿಚಾರವಾಗಿ ಪಾಲಿಕೆ ಮಾಜಿ ಸದಸ್ಯ ಎಂ.ಸಿ.ಚಿಕ್ಕಣ್ಣ ಅವರು 2008ರ ಮೇನಲ್ಲಿ ದಾಖಲೆಗಳ ಸಹಿತ ಪತ್ರಿಕಾ ಹೇಳಿಕೆ ನೀಡಿದ್ದರು. ಇದಕ್ಕೆ ಎಂ.ಕೆ.ಸೋಮಶೇಖರ್ ಅವರು ಎಂ.ಸಿ.ಚಿಕ್ಕಣ್ಣ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದರು.
ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಬಂಧನದ ವಾರಂಟ್ ಜಾರಿ
ಈ ಹೇಳಿಕೆಯಿಂದ ನೊಂದ ಎಂ.ಸಿ.ಚಿಕ್ಕಣ್ಣ ಅವರು ಎಂ.ಕೆ.ಸೋಮಶೇಖರ್ ವಿರುದ್ಧ ಮೈಸೂರಿನ ಜೆಎಂಎಫ್ ಮೂರನೇ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಸಂಸದರು ಹಾಗೂ ಶಾಸಕರ ವಿರುದ್ಧ ಹೂಡಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಎಂ.ಕೆ.ಸೋಮಶೇಖರ್ ವಿರುದ್ಧದ ಪ್ರಕರಣವನ್ನೂ ಬೆಂಗಳೂರಿನ ಈ ನ್ಯಾಯಾಲಯಕ್ಕೆ ವರ್ಗ ಮಾಡಲಾಗಿತ್ತು.
ಈ ಪ್ರಕರಣದಲ್ಲಿ ಜು. 30ರಂದು ಎಂ.ಕೆ.ಸೋಮಶೇಖರ್ ಅವರು ಹಾಜರಾಗದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿ ಆದೇಶಿಸಿದೆ.