ಮಾಧ್ಯಮದ ಮುಂದೆ ಮಾತನಾಡಿದ ರೂಪಾಗೆ ನೋಟಿಸ್: ಸಿದ್ಧರಾಮಯ್ಯ
ಮೈಸೂರು, ಜುಲೈ 14: ಬಿಜೆಪಿ ನಾಯಕರಿಗೆ ರಾಜಕೀಯ ಕುರಿತು ಎಳ್ಳಷ್ಟೂ ಜ್ಞಾನವಿಲ್ಲ. ಬೆಂಕಿ ಹಚ್ಚುವುದರಲ್ಲಿ ಅವರೆಲ್ಲರೂ ಪರಿಣತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬಿಜೆಪಿಯವರು ಹಚ್ಚಿದ ಬೆಂಕಿಯನ್ನು ಆರಿಸುವುದು ನಮ್ಮ ಕೆಲಸವಾಗಿದೆ. ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುತ್ತೇವೆ ಎನ್ನುತ್ತಾರೆ.

ಯಡಿಯೂರಪ್ಪ ಇಡೀ ಕರ್ನಾಟಕಕ್ಕೆ ಬೆಂಕಿ ಬೀಳತ್ತೆ ಅಂತಾರೆ, ಶೋಭಾ ಕರಂದ್ಲಾಜೆ ಕಾಂಗ್ರೆಸ್ ಶವ ಪೆಟ್ಟಿಗೆಗೆ ಮೊಳೆ ಹೊಡೆಯುತ್ತೇವೆ ಎನ್ನುತ್ತಾರೆ. ಇದು ಬಿಜೆಪಿಯವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಬಿಜೆಪಿಯವರು ಕತ್ತರಿಯಿಂದ ಕತ್ತರಿಸಿದ್ದನ್ನು ಸೂಜಿಯಿಂದ ಹೊಲಿಯುವುದು ನಮ್ಮ ಕೆಲಸವಾಗಿದೆ ಎಂದು ಹೇಳಿದರು.
ಬಿಜೆಪಿಯವರು ಅಧಿಕಾರಕ್ಕೆ ಬರಬೇಕೆಂದು ಏನೇನೋ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಹರಿಹಾಯ್ದರು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಹಿಳಾ ಕೈದಿ ಶಶಿಕಲಾಗೆ ರಾಜಾತಿಥ್ಯ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಪದೇ ಪದೇ ಮಾಧ್ಯಮಗಳ ಮುಂದೆ ಹೋಗಿ ಹೇಳಿಕೆ ನೀಡಿದ ಅಲ್ಲಿನ ಜೈಲು ಅಧಿಕಾರಿ ರೂಪಾಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಸ್ತೃತವಾದ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ಏನಾದರೂ ಸ್ಪಷ್ಟನೆ ಕೋರಿದರೆ ಮಾತ್ರ ಅದಕ್ಕೆ ಪ್ರತಿಕ್ರಿಯೆ ನೀಡುತ್ತೇವೆ. ತಮಿಳುನಾಡಿನಂತೆ ನಾವು ಕ್ಯಾತೆ ಮಾಡುವುದಿಲ್ಲ. ಈಗಾಗಲೇ ರಾಜ್ಯದ ಜಲಾಶಯಗಳಿಂದ 4 ರಿಂದ 5 ಟಿ.ಎಂ.ಸಿ ನೀರು ಬಿಟ್ಟಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭ ನೀರಾವರಿ ಸಚಿವರಾದ ಎಂ.ಬಿ.ಪಾಟೀಲ್, ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತಿತರರು ಮುಖ್ಯಮಂತ್ರಿ ಜೊತೆಗಿದ್ದರು.












Click it and Unblock the Notifications